ಹೊಸನಗರ: ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹೊಸನಗರದಲ್ಲಿ ನಡೆದ ಪ್ರತಿಭಟನಾ ಪಾದಯಾತ್ರೆ ಮಳೆ–ಬಿಸಿಲಿನ ನಡುವೆಯೂ ಯಶಸ್ವಿಯಾಗಿ ನಡೆಯಿತು.
ಕಾರಣಗಿರಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆ ಹೊಸನಗರ ಬಸ್ ನಿಲ್ದಾಣದವರೆಗೆ ಸಾಗಿತು. ಮಲೆನಾಡು ರೈತರ ಬದುಕು, ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರುವ ಆತಂಕದ ಹಿನ್ನೆಲೆಯಲ್ಲಿ ಸಾವಿರಾರು ರೈತರು, ಸಹಕಾರಿಗಳು ಹಾಗೂ ಸಾರ್ವಜನಿಕರು ಈ ಹೋರಾಟದಲ್ಲಿ ಭಾಗವಹಿಸಿದರು.
ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆಯ ಪ್ರಮುಖರಾದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ ಹಾಗೂ ವಾಟಗೋಡು ಸುರೇಶ್ ಅವರ ನೇತೃತ್ವದಲ್ಲಿ ಈ ಪಕ್ಷಾತೀತ ಪಾದಯಾತ್ರೆ ನಡೆಯಿತು.
ಲೇಖನವನ್ನು ಮುಂದುವರಿಸಿ ಓದಿ

ಪ್ರತಿಭಟನಾ ಸಭೆಯಲ್ಲಿ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಮಾಜಿ ಸದಸ್ಯ ಆಯನೂರು ಮಂಜುನಾಥ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಮಾಜಿ ಶಾಸಕ ಬಿ. ಸ್ವಾಮಿ ರಾವ್ ಸೇರಿದಂತೆ ಹಲವರು ಭಾಗವಹಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯರಾದ ಬಿ.ಪಿ. ರಾಮಚಂದ್ರ, ಶ್ವೇತಾ ಬಂಡಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಾ ಸುಬ್ರಮಣ್ಯ, ಸಾಕಮ್ಮ, ಯಶಸ್ವಿನಿ ಜೈನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್, ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟಿ ಸುಬ್ರಮಣ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿ.ಆರ್. ಜಯಂತ್, ವೀರಭದ್ರ ಪೂಜಾರಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ವಿ. ಜಯರಾಮ್, ಎನ್.ಆರ್. ದೇವಾನಂದ, ಕೆ.ಎಸ್. ಪ್ರಶಾಂತ್, ಚಿಕ್ಕಮಣತೆ ಯುವರಾಜ್, ಕಮ್ಮರಡಿ ಪ್ರಕಾಶ್, ದಿನೇಶ್, ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಮಲೆಬೈಲು, ಜಿ.ಇ. ಮುರಳಿಧರ, ಡಿ.ಆರ್. ವಿನಯ್, ಸುಧೀರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಪಕ್ಷಾತೀತವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ಸಭೆಯಲ್ಲಿ ಮಾತನಾಡಿದ ಮುಖಂಡರು, ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು. ವರದಿಯನ್ನು ಪುನರ್ ಪರಿಶೀಲಿಸಿ, ಕೇರಳ ಮಾದರಿಯಲ್ಲಿ ಜನವಸತಿ ಪ್ರದೇಶಗಳು ಮತ್ತು ಕೃಷಿ ಭೂಮಿಯನ್ನು ಹೊರಗಿಟ್ಟು ಮಾರ್ಪಾಡು ಮಾಡಬೇಕು ಎಂದು ಆಗ್ರಹಿಸಿದರು.

ಮಲೆನಾಡಿನ ಜನರ ಬದುಕು, ಕೃಷಿ ಚಟುವಟಿಕೆಗಳು, ಮನೆ ನಿರ್ಮಾಣ, ರಸ್ತೆ, ಕುಡಿಯುವ ನೀರು, ವಿದ್ಯುತ್ ಮತ್ತು ಮೂಲಸೌಕರ್ಯಗಳ ಮೇಲೆ ನಿರ್ಬಂಧ ಬರುವಂತ ನಿರ್ಧಾರಗಳನ್ನು ಸ್ಥಳೀಯರ ಅಭಿಪ್ರಾಯವಿಲ್ಲದೆ ಕೈಗೊಳ್ಳಬಾರದು ಎಂದು ಹೋರಾಟಗಾರರು ಹೇಳಿದರು.
ಈ ಹೋರಾಟ ಯಾವುದೇ ಪಕ್ಷದದ್ದಲ್ಲ. ಮಲೆನಾಡಿನ ಮಣ್ಣು, ರೈತರು ಮತ್ತು ಜನರ ಬದುಕಿನ ಪ್ರಶ್ನೆ ಎಂದು ಮುಖಂಡರು ಸ್ಪಷ್ಟಪಡಿಸಿದರು.

