Hosanagara

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಮಧು ಬಂಗಾರಪ್ಪ

ಹೊಸನಗರ ; ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಂಗಳವಾರ ಅವರು ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಅವರು ಮಾತನಾಡಿದರು.

ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದ ಅವರು, ಲೋಕೋಪಯೋಗಿ ಸಚಿವರೊಂದಿಗೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತುರ್ತಾಗಿ ವ್ಯವಸ್ಥಿತ ರೀತಿಯ ಕಾಮಗಾರಿ ನಡೆಸಲು ಕ್ರಮ ವಹಿಸಲಾಗುವುದು ಎಂದ ಹೇಳಿ, ಈ ಭಾಗದ ಜನಸಾಮಾನ್ಯರ ಅಹವಾಲುಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಮುಂದೆಯೂ ಮಾಡುತ್ತೇನೆಂದು ಭರವಸೆ ನೀಡಿದರು.

ಕಾಮಗಾರಿ ವಿವರ :

ಮಳೆಯಿಂದ ಭೂಕುಸಿತ ಉಂಟಾಗಿದ್ದ ಹುಲಿಕಲ್ ಘಾಟ್ ಸ್ಥಳದಲ್ಲಿ ಶಾಶ್ವತ ಪರಿಹಾರಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಮೊದಲ ಹಂತದಲ್ಲಿ 435 ಲಕ್ಷ ರೂ.ಗಳ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1BNo1Y49qW/

ಸುಮಾರು 80 ಮೀಟರ್ ಉದ್ದದ ಆರ್.ಸಿ.ಸಿ. ತಡೆಗೋಡೆಯನ್ನು ಇಲಾಖೆಯ ತಾಂತ್ರಿಕ ವಿನ್ಯಾಸದಂತೆ ನಿರ್ಮಿಸಲಾಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 60 ಮೀಟರ್ ಉದ್ದದ ಭಾಗದಲ್ಲಿ ಹಳೆಯ ಮಣ್ಣನ್ನು ತೆರವುಗೊಳಿಸಿ, ಅಡಿಪಾಯದೊಂದಿಗೆ ಸುಮಾರು 6 ಮೀಟರ್ ಎತ್ತರದವರೆಗೆ ಗೋಡೆ ನಿರ್ಮಿಸಲಾಗಿದೆ.

ಹೊಸನಗರ ತಾಲೂಕಿನ ತೀರ್ಥಹಳ್ಳಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿ 52ರ ಸರಪಳಿ 38.00 ಕಿ.ಮೀ ನಿಂದ 43.58 ಕಿ.ಮೀ ವರೆಗಿನ ಸುಮಾರು 5.58 ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.

ಹೇರ್ ಪಿನ್ ತಿರುವುಗಳ ಸುಧಾರಣೆ:

ರಸ್ತೆಯ ಸರಪಳಿ 42.05 ಕಿ.ಮೀ ನಿಂದ 42.25 ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು.

ಇದೇ ವೇಳೆ ಸಾರ್ವಜನಿಕರು ಮಾತನಾಡಿ, ಹುಲಿಕಲ್ ಘಾಟ್ ರಸ್ತೆ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ಅನುದಾನ ನಿಗದಿಗೊಳಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಈ ವೇಳೆ ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪಿಡಬ್ಲ್ಯುಡಿ ಅಧೀಕ್ಷಕ ಅಭಿಯಂತರ ಗಣೇಶ್, ಇತರೆ ಅಧಿಕಾರಿಗಳು, ಸ್ಥಳೀಯರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>