ಶಿವಮೊಗ್ಗ: ಕೇಂದ್ರ ಸರ್ಕಾರದ ಸಹಾಯಧನದಲ್ಲಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿರುವ ಬಗ್ಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸದೆ ಪಕ್ಷೀಯಮಟ್ಟದಲ್ಲಿ ನಡೆಸಲಾಗುತ್ತಿರುವುದು ಖೇದಕಾರಿ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಗಂದೂರು ಸೇತುವೆ ಆ ಭಾಗದ ಜನತೆಗೆ ಬಹಳ ಉಪಯುಕ್ತವಾಗಲಿದೆ. ಆದರೆ ಈ ಯೋಜನೆಯ ಲೋಕಾರ್ಪಣೆಯನ್ನು ಬಿಜೆಪಿ ಪಕ್ಷದ ಪ್ರಚಾರ ವೇದಿಕೆಯಾಗಿ ಉಪಯೋಗಿಸುತ್ತಿರುವುದು ಸರಿಯಲ್ಲ. ಇಲ್ಲಿಯ ತನಕ ನನಗೆ ಯಾವುದೇ ಆಹ್ವಾನ ಪತ್ರಿಕೆ ನೀಡಿಲ್ಲ. ಸಂಸದ ಬಿವೈ ರಾಘವೇಂದ್ರ ಪ್ರತಿದಿನ ಬಂದು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ನಾನು ಶಾಸಕರಾಗಿದ್ದರೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
“ನಾನು ಈ ಸೇತುವೆ ಲೋಕಾರ್ಪಣೆಗೆ ಹೋಗುತ್ತೇನೆ. ಇದು ಕೇಂದ್ರ ಸರ್ಕಾರದ ಯೋಜನೆಯಾದ್ದರಿಂದ ಯಾವುದೇ ರಾಜಕಾರಣ ಮಾಡಬಾರದು. ಜನರ ಹಿತದ ದೃಷ್ಟಿಯಿಂದಲೇ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ” ಎಂದು ಸ್ಪಷ್ಟಪಡಿಸಿದರು. ಸಿಗಂದೂರು ಧರ್ಮದರ್ಶಿ ರಾಮಪ್ಪರಿಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂಬ ಮಾಹಿತಿಯೂ ದೊರೆತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿರಲಿದ್ದಾರೆ.