ರಿಪ್ಪನ್ಪೇಟೆ : ರಾಜ್ಯದ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಇದೇ ಶೈಕ್ಷಣಿಕ ವರ್ಷದಲ್ಲಿ ಜೂನ್ 1 ರಿಂದ 1000 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುವುದೆಂದು ಹೇಳಿಕೆ ನೀಡುತ್ತಾ ಜೂನ್ ಮೊದಲ ವಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡುವ ಬಗ್ಗೆ ಭರ್ಜರಿ ಸಿದ್ದತೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಬದಲಾವಣೆ ನಡೆದು ಮಧು ಬಂಗಾರಪ್ಪನವರ ಕನಸು ನುಚ್ಚು ನೂರಾಗಿದೆ.
ಒಂದೇ ಸೂರಿನಡಿ ಎಲ್.ಕೆ.ಜಿ ಯಿಂದ 12ನೇ ತರಗತಿಯವರೆಗೆ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಪ್ರಾರಂಭಿಸುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಹೊಡೆಯುವ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಟಾನಗೊಳಿಸುವ ಕನಸು ಕಂಡಿದ್ದ ಸಿದ್ದರಾಮಯ್ಯ ಸರ್ಕಾರದ ಶಿಕ್ಷಣ ಸಚಿವರ ಮಹಾದಾಸೆಗೆ ತಣ್ಣೀರೆರಚಿದಂತಾಗಿದೆ.
ಹೊಸನಗರ ತಾಲ್ಲೂಕು ರಾಜ್ಯಕ್ಕೆ ಬೆಳಕು ನೀಡುವ ಸದ್ದುದ್ದೇಶದಿಂದಾಗಿ ಮನೆ ಮಠವನ್ನು ಕಳೆದುಕೊಂಡು ನಿರಾಶ್ರಿತರಾಗುವ ಮೂಲಕ ಹಿಂದುಳಿದ ತಾಲ್ಲೂಕು ಎಂದು ಬಿಂಬಿಸಿಕೊಳ್ಳುವ ಸಂದರ್ಭದಲ್ಲಿಯೇ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೆಗೂ ಸರ್ಕಾರದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಆಯ್ಕೆಯಿಂದ ದೂರ ಉಳಿಯುವಂತಾಗಿದೆ. ಆದರೆ ಸರ್ಕಾರಿ ಪ್ರೌಢಶಾಲೆ 8 ರಿಂದ 12ನೇ ತರಗತಿಯ ವರೆಗೆ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಎಂದು ದೊಡ್ಡ ಗಾತ್ರದ ಫಲಕವನ್ನು ಅಳವಡಿಸಿಕೊಳ್ಳುವ ಮೂಲಕ ಎಲ್.ಕೆ.ಜಿ. ಯಿಂದ 7ನೇ ತರಗತಿಯವರೆಗೆ ಒಂದೇ ಸೂರಿನಡಿಯಿಂದ ಹೊರಗುಳಿಯುವಂತೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಸ್ಥಳೀಯ ಶಾಸಕರು ಹಲವಾರು ಸರ್ಕಾರಿ ಶಾಲಾ ಕಾಲೇಜ್ ವಾರ್ಷಿಕೋತ್ಸವ ಮತ್ತು ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ರಿಪ್ಪನ್ಪೇಟೆಯಲ್ಲಿ ಸರ್ಕಾರಿ ಶಾಲೆಗಳು ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೇರಿಸುವ ಭರವಸೆ ಭರವಸೆಯಾಗಿಯೇ ಉಳಿಯುವಂತಾಗಿದೆ.