ಸಾಗರ : ಪಶ್ಚಿಮ ಘಟ್ಟ ವ್ಯಾಪ್ತಿಯ ಮಲೆನಾಡು ಭಾಗಕ್ಕೆ ಕಸ್ತೂರಿ ರಂಗನ್ ವರದಿ ಮಾರಕವಾಗಲಿದೆ ಎಂದು ಆರೋಪಿಸಿ, ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ಸಂಯುಕ್ತ ರೈತ ಸಂಘ ಧರಣಿ ಎಚ್ಚರಿಕೆ ನೀಡಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸದ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಂಯುಕ್ತ ರೈತ ಸಂಘದ ಸಾಗರ ತಾಲೂಕು ಅಧ್ಯಕ್ಷ ಎಂ.ಬಿ. ಮಂಜಪ್ಪ ಹಿರೇನಲ್ಲೂರು ತಿಳಿಸಿದ್ದಾರೆ.
ಸಾಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ 1ನೇ ತಾರೀಖಿನಿಂದ ಶಿವಮೊಗ್ಗದ ವಿನೋಬನಗರದಲ್ಲಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ಮನೆ ಮುಂದೆ ಧರಣಿ ಆರಂಭಿಸಲಾಗುವುದು ಎಂದು ಹೇಳಿದರು.
ಲೇಖನವನ್ನು ಮುಂದುವರಿಸಿ ಓದಿ
ಮಲೆನಾಡು ಭಾಗದ ರೈತರು ಈಗಾಗಲೇ ಸೊಪ್ಪಿನಬೆಟ್ಟ, ಕಾನು ಮತ್ತು ಕುಂಟೆ ಜಮೀನುಗಳ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯಾದರೆ ಸಾಗರ ತಾಲೂಕು ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಮಂಜಪ್ಪ ಆತಂಕ ವ್ಯಕ್ತಪಡಿಸಿದರು.
ವರದಿ ಜಾರಿಗೆ ಬಂದರೆ ರೈತರು ಮನೆ ಕಟ್ಟಿಕೊಳ್ಳುವುದು, ಮೂಲಸೌಕರ್ಯ ಪಡೆಯುವುದು ಮತ್ತು ಕೃಷಿ ಆಧಾರಿತ ಜೀವನ ನಡೆಸುವುದು ಕಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ರೈತರ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯನ್ನು ಕಸ್ತೂರಿ ರಂಗನ್ ವರದಿ ವ್ಯಾಪ್ತಿಯಿಂದ ಸಂಪೂರ್ಣವಾಗಿ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.
ಸಂಸದ ಬಿ.ವೈ. ರಾಘವೇಂದ್ರ ಅವರು ಲೋಕಸಭೆಯಲ್ಲಿ ಈ ವಿಚಾರವನ್ನು ಗಟ್ಟಿಯಾಗಿ ಪ್ರಸ್ತಾಪಿಸಬೇಕು. ಕೇಂದ್ರ ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿ ಶಿವಮೊಗ್ಗ ಜಿಲ್ಲೆಯ ರೈತರಿಗೆ ಸ್ಪಷ್ಟ ಭರವಸೆ ತರಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ಜಿಲ್ಲೆಯ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳುವವರೆಗೆ ಹೋರಾಟ ನಿಲ್ಲುವುದಿಲ್ಲ. ಮಲೆನಾಡಿನ ರೈತರ ಅಸ್ತಿತ್ವದ ರಕ್ಷಣೆಗೆ ನಡೆಯುವ ಈ ಹೋರಾಟಕ್ಕೆ ಸಾರ್ವಜನಿಕರು ಮತ್ತು ಮಾಧ್ಯಮಗಳು ಬೆಂಬಲ ನೀಡಬೇಕು ಎಂದು ಮಂಜಪ್ಪ ಮನವಿ ಮಾಡಿದರು.

