ಶಿವಮೊಗ್ಗ: ಸಾಧು-ಸಂತರ ನಿಸ್ವಾರ್ಥ ಸೇವೆಯೇ ಜಗತ್ತಿನಲ್ಲಿ ಭಾರತಕ್ಕೆ ಗೌರವ ಸಿಗಲು ಪ್ರಮುಖ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
“ದಿವ್ಯ ಸಂಜೆ” ಸಂವಾದ ಕಾರ್ಯಕ್ರಮದ ಬಳಿಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಂದ ಸ್ಮರಣಿಕೆ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುವವರು ಸಾಕಷ್ಟಿದ್ದಾರೆ. ಆದರೆ ಆಧ್ಯಾತ್ಮಿಕತೆಯನ್ನು ಸಮಾಜಕ್ಕೆ ನೀಡುವವರು ಕಡಿಮೆ. ಆಧ್ಯಾತ್ಮಿಕತೆ ಇಲ್ಲದಿದ್ದರೆ ಮನುಷ್ಯನಿಗೆ ನೆಮ್ಮದಿ ಸಿಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಶಿಕ್ಷಣ, ಆರೋಗ್ಯ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆ ಜಗತ್ತಿಗೆ ಮಾದರಿಯಾಗಿದೆ ಎಂದು ಈಶ್ವರಪ್ಪ ಹೇಳಿದರು.
ಇಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳು ಮುಂದಿನ 10 ವರ್ಷಗಳ ನಂತರ ಸಮಾಜ ಸೇವೆಗೆ ತಾವು ತಯಾರಾಗುವುದಾಗಿ ಹೇಳಿರುವುದು ಸಂತಸದ ವಿಷಯ. ಇಂತಹ ಸಂಕಲ್ಪ ಖಂಡಿತವಾಗಿ ಯಶಸ್ವಿಯಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಸಾಧು-ಸಂತರ ಸೇವಾ ಮನೋಭಾವ, ಆಧ್ಯಾತ್ಮಿಕ ಮಾರ್ಗದರ್ಶನ ಮತ್ತು ಸಮಾಜಮುಖಿ ಕಾರ್ಯಗಳಿಂದ ಭಾರತಕ್ಕೆ ವಿಶ್ವಮಟ್ಟದಲ್ಲಿ ವಿಶೇಷ ಗೌರವ ದೊರೆತಿದೆ ಎಂದು ಈಶ್ವರಪ್ಪ ಹೇಳಿದರು.

