ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಸಂಭವಿಸಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಗ್ರಾಮದ ನಿವಾಸಿ ಯಲ್ಲಪ್ಪ (45) ಮೃತಪಟ್ಟ ದುರ್ದೈವಿ. ಇವರು ಕಳೆದ ಕೆಲವು ಸಮಯದಿಂದ ಚಿಕ್ಕಮಗಳೂರು ಭಾಗದಲ್ಲಿ ಗಾರೆ ಕೆಲಸ ಹಾಗೂ ತೋಟದ ಕೂಲಿ ಕೆಲಸ ಮಾಡಿಕೊಂಡಿದ್ದರು.
ಘಟನೆಯ ವಿವರ ;
ಯಲ್ಲಪ್ಪ ಅವರು ಕೆಲಸ ಮುಗಿಸಿಕೊಂಡು ಸಂಜೆ ವೇಳೆ ನಾಗೇಶ್ ಗೌಡರ ತೋಟದ ಹಾದಿಯ ಮೂಲಕ ಶ್ರೀಧರ್ ಗೌಡ ಎಂಬುವರ ತೋಟದಲ್ಲಿದ್ದ ಲೈನ್ ಮನೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಯಲ್ಲಪ್ಪ ಅವರ ಮೇಲೆ ದಾಳಿ ಮಾಡಿದೆ. ಆನೆಯ ಭೀಕರ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಲೇಖನವನ್ನು ಮುಂದುವರಿಸಿ ಓದಿ
ಸ್ಥಳಕ್ಕೆ ಅಧಿಕಾರಿಗಳ ಭೇಟಿ ;
ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾರ್ಮಿಕರು ಹಾಗೂ ರೈತರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಅರಣ್ಯ ಇಲಾಖೆ ತಕ್ಷಣವೇ ಕ್ರಮ ಕೈಗೊಂಡು ಕಾಡಾನೆಗಳನ್ನು ಹಿಮ್ಮೆಟ್ಟಿಸಬೇಕು ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

