ಸಾಗರ : ಮಲೆನಾಡಿನ ಜನಪ್ರಿಯ ನಾಯಕ ಮತ್ತು ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮಲೆನಾಡಿನ ಅಭಿಮಾನಿಗಳು ಮತ್ತು ಸಾರ್ವಜನಿಕರಿಂದ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಅಭಿಮಾನಿಗಳು ಮತ್ತು ಸಾರ್ವಜನಿಕರು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಉದ್ದೇಶಿಸಿ ಬರೆದಿರುವ ಪತ್ರದಲ್ಲಿ, ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ಬೇಳೂರು ಅವರ ನಾಯಕತ್ವ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ. ಶರಾವತಿ ಹಿನ್ನೀರು ಸಂತ್ರಸ್ತರ ಪುನರ್ವಸತಿ, ಬಗರ್ ಹುಕುಂ ಸಕ್ರಮಗೊಳಿಸುವಿಕೆ ಸೇರಿದಂತೆ ರೈತರ ಪ್ರಮುಖ ಸಮಸ್ಯೆಗಳಿಗೆ ಸಮರ್ಥ ಪರಿಹಾರ ಕಂಡುಕೊಳ್ಳಲು ಸಂಪುಟದಲ್ಲಿ ಮಲೆನಾಡಿನ ನಾಡಿಮಿಡಿತ ನಾಯಕರು ಅಗತ್ಯವಿರುವುದಾಗಿ ಪತ್ರದಲ್ಲಿ ವಿವರಿಸಲಾಗಿದೆ.

ಗೋಪಾಲಕೃಷ್ಣ ಬೇಳೂರು ರಾಜ್ಯ ರಾಜಕಾರಣದಲ್ಲಿ ಒಂದೇ ಕ್ಷೇತ್ರಕ್ಕೆ ಸೀಮಿತವಾಗದೆ, ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸರಳತೆ, ಜನಸ್ನೇಹಿ ಸ್ವಭಾವ ಮತ್ತು ಶೋಷಿತ, ರೈತ, ಯುವಕರ ಪರ ನಿರಂತರವಾಗಿ ಹೋರಾಟ ನಡೆಸಿರುವುದು ಮಲೆನಾಡಿನ ಜನರಲ್ಲಿ ವಿಶಿಷ್ಟ ಗೌರವವನ್ನು ಹೊಂದಿದೆ ಎಂದು ಅಭಿಮಾನಿಗಳು ತಿಳಿಸಿದ್ದಾರೆ.
ಪಕ್ಷದ ಎಲ್ಲಾ ಸವಾಲುಗಳಲ್ಲಿ ನಿಷ್ಠಾವಂತರಾಗಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ತೀರ್ಮಾನಗಳಿಗೆ ಬದ್ಧರಾಗಿರುವ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಸಮರ್ಪಕ ಪ್ರಾತಿನಿಧ್ಯ ದೊರೆಯುತ್ತದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಅವರ ಅಸಾಮಾನ್ಯ ನಾಯಕತ್ವದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸಬಲವಾಗಲು ಸಾಧ್ಯವೆಂದು ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಮತ್ತು ಹಿರಿಯ ನಾಯಕರಿಂದ ಈ ನ್ಯಾಯಸಮ್ಮತ ಕೋರಿಕೆಯನ್ನು ಸ್ವೀಕರಿಸಿ, ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ನಿರೀಕ್ಷೆಯೂ ವ್ಯಕ್ತವಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





