ಸಾಗರ ; ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆಯ ಪರಿಣಾಮವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಒಳಹರಿವೂ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯವು ಶೀಘ್ರದಲ್ಲೇ ತನ್ನ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ.
ಜಲಾಶಯದ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಯಾವುದೇ ಕ್ಷಣದಲ್ಲಾದರೂ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಬಹುದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಟಿಸಿಎಲ್) ಮಾಹಿತಿ ನೀಡಿದೆ.
Read More:ಸಿಗಂದೂರಿನ ಲಾಂಚ್ಗಳನ್ನು ಇನ್ಮುಂದೆ ಹೊಟೇಲ್ಗಳಾಗಿ ಪರಿವರ್ತನೆ : ಶಾಸಕ ಬೇಳೂರು ಗೋಪಾಲಕೃಷ್ಣ
ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಕೆಳಭಾಗ ಹಾಗೂ ನದಿಯ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಮುಂಜಾಗ್ರತಾ ಕ್ರಮವಾಗಿ ತಮ್ಮ ಕುಟುಂಬ ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಬೇಕೆಂದು ಮನವಿ ಮಾಡಲಾಗಿದೆ.
ಅದೇ ರೀತಿ ಪ್ರವಾಸಿಗರು ನದಿಗೆ ಇಳಿಯಬಾರದು, ನೀರಿನ ಹರಿವು ಏಕಾಏಕಿ ಹೆಚ್ಚುವ ಸಾಧ್ಯತೆ ಇರುವುದರಿಂದ ಅಪಾಯ ಸಂಭವಿಸಬಹುದು ಎಂಬ ಎಚ್ಚರಿಕೆಯನ್ನು ಕೆಪಿಟಿಸಿಎಲ್ ನೀಡಿದೆ.
ಪ್ರವಾಹದ ಪರಿಸ್ಥಿತಿಗೆ ತಕ್ಕಂತೆ ಅಧಿಕಾರಿಗಳು ನಿರಂತರ ನಿಗಾವಹಿಸುತ್ತಿದ್ದು, ಸಾರ್ವಜನಿಕರಿಗೆ ತ್ವರಿತ ಮಾಹಿತಿ ನೀಡಲಾಗುವುದು. ನಾಗರಿಕರು ಪೊಲೀಸರ ಹಾಗೂ ತುರ್ತು ವ್ಯವಸ್ಥಾಪನಾ ಇಲಾಖೆಯ ಸೂಚನೆಗಳನ್ನು ಗಮನಿಸಿ ಸಹಕಾರ ನೀಡಬೇಕೆಂದು ವಿನಂತಿಸಲಾಗಿದೆ.

