ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ನಿವಾಸ ಮತ್ತು ಕಾರ್ಯಾಲಯದ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಇನ್ಸ್ಪೆಕ್ಟರ್ ರುದ್ರೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಈ ವೇಳೆ 10ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಕಿರಣ್ ಅಂಗಡಿ ಅವರು ಶಿವಮೊಗ್ಗದ ಆಲ್ಕೊಳ ಸರ್ಕಲ್ ಸಮೀಪದ ಅರಣ್ಯ ಇಲಾಖೆ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಎಸಿಎಫ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಕಚೇರಿಯಲ್ಲಿಯೂ ದಾಖಲೆ ಪರಿಶೀಲನೆ ಮುಂದುವರಿದಿದೆ.
ಮೂಲಗಳ ಪ್ರಕಾರ, ಧಾರವಾಡದಿಂದ ಶಿವಮೊಗ್ಗಕ್ಕೆ ವರ್ಗಾಯಿಸಲ್ಪಟ್ಟ ಕಿರಣ್ ಅಂಗಡಿ ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಯ ಸಂಬಂಧಿ ದೂರುಗಳು ಬಂದಿರುವುದರಿಂದ ಈ ದಾಳಿ ನಡೆದಿದ್ದು, ಅವರ ಸೇವಾ ಇತಿಹಾಸ ಹೊಂದಿರುವ ಧಾರವಾಡ ಸೇರಿದಂತೆ ಇತರ ಪ್ರದೇಶಗಳಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.
ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು, ಅವುಗಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ ಮತ್ತು ತನಿಖೆ ಮುಂದುವರಿದಿರುವುದಾಗಿ ತಿಳಿದು ಬಂದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





