ಶಿವಮೊಗ್ಗ ಸುದ್ದಿ ಶಿವಮೊಗ್ಗ

ಮತ್ತೆ ಸಚಿವ ಸಂಪುಟಕ್ಕೆ ಮಧು ಬಂಗಾರಪ್ಪ ಸೇರ್ಪಡೆ; ಜವಾಬ್ದಾರಿ ಹೆಚ್ಚಾಗಿದೆ ಎಂದ ಸಚಿವರು

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಂಡಿರುವ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಅವಕಾಶ ನೀಡಿದ ಕಾಂಗ್ರೆಸ್‌ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಸೇವೆ ಮಾಡಲು ಪಕ್ಷದ ಹಿರಿಯರು ಮತ್ತೊಮ್ಮೆ ಅವಕಾಶ ಕಲ್ಪಿಸಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸೊರಬ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

‘ಈಗ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ’

ಮತ್ತೆ ಸಚಿವರಾಗಿರುವುದು ಸಂತೋಷ ತಂದಿದೆ. ರಾಜಕೀಯದಲ್ಲಿ ಕೆಲವೊಮ್ಮೆ ಕಾಯುವುದು ಅನಿವಾರ್ಯವಾಗುತ್ತದೆ. ಪಕ್ಷದ ಹೈಕಮಾಂಡ್ ತಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಉತ್ತಮವಾಗಿ ಕೆಲಸ ಮಾಡುವುದು ಈಗಿನ ಪ್ರಮುಖ ಜವಾಬ್ದಾರಿ ಎಂದು ಮಧು ಬಂಗಾರಪ್ಪ ತಿಳಿಸಿದರು.

ಪಕ್ಷ ಮತ್ತು ಸರ್ಕಾರ ನೀಡುವ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸಿ, ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವುದಾಗಿ ಹೇಳಿದರು.

ಹಿಂದಿನ ಕೆಲಸಗಳ ಕುರಿತು ಏನಂದ್ರು?

ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ, ಪಕ್ಷದ ಪ್ರಣಾಳಿಕೆ ರಚನಾ ಸಮಿತಿಯ ಉಪಾಧ್ಯಕ್ಷರಾಗಿ ಹಾಗೂ ಶಿಕ್ಷಣ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಟೀಕೆ ಮತ್ತು ಅಭಿಪ್ರಾಯಗಳ ನಡುವೆಯೂ ಉತ್ತಮ ಕೆಲಸ ಮಾಡಿರುವ ತೃಪ್ತಿ ಇದೆ ಎಂದು ಅವರು ಹೇಳಿದರು.

ತಮ್ಮ ಹಿಂದಿನ ಆಡಳಿತಾವಧಿಯ ಕೆಲಸ ಮತ್ತು ಅನುಭವವನ್ನು ಮುಂದಿನ ಜವಾಬ್ದಾರಿಯಲ್ಲೂ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದಾಗಿ ತಿಳಿಸಿದರು.

ಯಾವ ಖಾತೆ ಸಿಗಲಿದೆ?

ಸಚಿವರಿಗೆ ಯಾವ ಖಾತೆ ಹಂಚಿಕೆಯಾಗಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಖಾತೆ ಹಂಚಿಕೆ ಸಂಪೂರ್ಣವಾಗಿ ಪಕ್ಷದ ಹಿರಿಯರು ಮತ್ತು ಸರ್ಕಾರದ ಮುಖ್ಯಸ್ಥರಿಗೆ ಸೇರಿದ ವಿಷಯ ಎಂದರು.

ಯಾವುದೇ ಖಾತೆ ನೀಡಿದರೂ ಅದನ್ನು ಜವಾಬ್ದಾರಿಯಿಂದ ಮತ್ತು ಸಮರ್ಥವಾಗಿ ನಿರ್ವಹಿಸುವುದಾಗಿ ಹೇಳಿದರು.

ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರು

ನೂತನ ಸಚಿವರ ಪಟ್ಟಿ ಪ್ರಕಟವಾದ ಬಳಿಕ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಹಲವು ಮುಖಂಡರು ಬೆಂಗಳೂರಿನಲ್ಲಿರುವ ಮಧು ಬಂಗಾರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಎನ್. ರಮೇಶ್ ಸೇರಿದಂತೆ ಹಲವು ಮುಖಂಡರು ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದರು.

Leave a Comment