ಶಿವಮೊಗ್ಗ: “ಯಾರೂ ಇಂತಹದೇ ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿರುವುದಿಲ್ಲ. ಭಗವದ್ಗೀತೆ, ಕುರಾನ್, ಬೈಬಲ್ಗಳಂತೆ ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನವೇ ನಮಗೆ ಮುಖ್ಯ” ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ರಾಜಕೀಯ ಮಾಡುವುದಕ್ಕಿಂತ ಸಂವಿಧಾನದ ಮೌಲ್ಯಗಳನ್ನು ಗೌರವಿಸುವುದು ಮುಖ್ಯ. ಸಮಾಜದಲ್ಲಿ ಎಲ್ಲರಿಗೂ ಸಮಾನ ಹಕ್ಕು ಮತ್ತು ಗೌರವ ಸಿಗಬೇಕು ಎಂಬುದೇ ಸಂವಿಧಾನದ ಆಶಯ ಎಂದು ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಿಂದೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದನ್ನು ಉಲ್ಲೇಖಿಸಿದ ಮಧು ಬಂಗಾರಪ್ಪ, ಆಗ ಅವರ ಅಕ್ಕಪಕ್ಕ ಇದ್ದವರೇ ಇಂದು ಕೇಂದ್ರ ರಾಜಕೀಯದಲ್ಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಕೆಪಿಎಸ್ಸಿ ಕಾರ್ಯದರ್ಶಿ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಂಧನದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ನೇಮಕಾತಿ ಪ್ರಕ್ರಿಯೆಯಲ್ಲಿರುವ ಲೋಪಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಯಾವುದೇ ಅರ್ಹ ಅಭ್ಯರ್ಥಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದರು.
ಇದೇ ವೇಳೆ ಬಿಜೆಪಿ ಪಾದಯಾತ್ರೆ ಕುರಿತು ವ್ಯಂಗ್ಯವಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾಗಿರುವುದರಿಂದ ಬಿಜೆಪಿಯವರಿಗೆ ವಿಷಯವೇ ಇಲ್ಲದಂತಾಗಿದೆ. ಅವರು ವಾಕಿಂಗ್ ಮಾಡುವ ಮೂಲಕ ತಮ್ಮ ಆರೋಗ್ಯ ಸುಧಾರಿಸಿಕೊಳ್ಳಲಿ ಎಂದು ಹೇಳಿದರು.

