ಶಿವಮೊಗ್ಗ ಸುದ್ದಿ

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕುಪತ್ರ ಒದಗಿಸಲು ಕ್ರಮ ; ಸಚಿವ ಮಧು ಬಂಗಾರಪ್ಪ

SORABA ; ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ ಕಟ್ಟಿಕೊಂಡು ಜೀವನ ನಿರ್ವಹಿಸುತ್ತಿರುವ ಅರ್ಹ ರೈತರಿಗೆ ಮತ್ತು ನಿವಾಸಿಗಳಿಗೆ ಸರ್ಕಾರದಿಂದಲೇ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.

WhatsApp Group Join Now
Telegram Group Join Now
Instagram Group Join Now

ಅವರು ಶನಿವಾರ ಸೊರಬದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಈ ಹಿಂದೆ ಸದರಿ ವಿಷಯವು ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಾಧಾರ ಮತ್ತು ದಾಖಲೆಗಳ ಸಹಿತ ಸಮರ್ಥಿಸಿಕೊಳ್ಳುವಲ್ಲಿ ನ್ಯೂನತೆಗಳಿದ್ದುದನ್ನು ಗುರುತಿಸಿ, ಓರ್ವ ಸಮರ್ಥ ನ್ಯಾಯವಾದಿಯೊಬ್ಬರನ್ನು ಈಗಾಗಲೇ ನೇಮಿಸಿದೆ. 2025ರ ಜನವರಿ ಮಾಹೆಯಲ್ಲಿ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದ ಶರಾವತಿ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ತೀರ್ಪು ಹೊರಬರುವ ಆಶಯ ತಮಗಿರುವುದಾಗಿ ಅವರು ತಿಳಿಸಿದರು.

ಹಲವು ದಶಕಗಳ ಸಮಸ್ಯೆಗೆ ಈ ಹಿಂದಿನ ಚುನಾಯಿತ ಜನಪ್ರತಿನಿಧಿಗಳು ಅರ್ಹ ಬಡ ರೈತರಿಗೆ, ವನವಾಸಿಗಳಿಗೆ ಸರಿಯಾದ ನ್ಯಾಯ ಒದಗಿಸುವಲ್ಲಿ ವಿಫುಲರಾಗಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದ ಅವರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಧಿಕಾರಾವಧಿಯಲ್ಲಿ ವಿತರಿಸಲಾಗಿದ್ದ ಹಕ್ಕುಪತ್ರಗಳನ್ನು ನಂತರ ಆಡಳಿತಕ್ಕೆ ಬಂದ ಸರ್ಕಾರಗಳು ಸದರಿ ಹಕ್ಕುಪತ್ರಗಳನ್ನು ಅನೂರ್ಜಿತಗೊಳಿಸಿ, ರೈತರನ್ನು ಸಂಕಷ್ಟಕ್ಕೀಡು ಮಾಡಿದ್ದವು. ಪ್ರಸ್ತುತ ಸರ್ಕಾರ ನೊಂದವರ ಪರವಾಗಿ ಕಾರ್ಯನಿರ್ವಹಿಸಲಿದೆ ಎಂದವರು ನುಡಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಯತ್ನ ಮುಂದುವರೆದಿದ್ದು, ಅರ್ಹರಿಗೆ ಹಕ್ಕುಪತ್ರ ನೀಡುವ ಕುರಿತು ಈಗಾಗಲೇ ಅನೇಕ ಬಾರಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ಅಡಿಕೆ ಹಾನಿಕಾರಕವಲ್ಲ :

ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಾಗೂ ಪರಂಪರಾಗತವಾಗಿ ಅಡಿಕೆ ಬೆಳೆಯನ್ನು ತಮ್ಮ ಜೀವನಾಧಾರ ಬೆಳೆಯನ್ನಾಗಿ ಬೆಳೆಸಿಕೊಂಡು ಬರಲಾಗುತ್ತಿದೆ. ಅಲ್ಲದೇ ಅದರ ಕ್ಷೇತ್ರವ್ಯಾಪ್ತಿ ಪ್ರತಿವರ್ಷ ಹೆಚ್ಚಾಗುತ್ತಲೇ ಇದೆ. ಕೆಲವು ವರ್ಷಗಳ ಹಿಂದೆ ಅಡಿಕೆ ಬೆಳೆ ಆರೋಗ್ಯಕ್ಕೆ ಹಾನಿಕಾರಕವೆಂದು ಸಂಸ್ಥೆಯೊಂದು ವರದಿ ನೀಡಿತ್ತು. ಈ ವರದಿ ಸ್ಪಷ್ಟತೆಯಿಂದ ಕೂಡಿಲ್ಲ. ಬದಲಾಗಿ ಅಡಿಕೆ ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಹಾನಿಕಾರಕವಲ್ಲ ಎಂದ ಅವರು, ರಾಜ್ಯ ಸರ್ಕಾರವು ಅಡಿಕೆ ಬೆಳೆಗಾರರ ಸಂರಕ್ಷಣೆಗೆ ಬದ್ದವಾಗಿದೆ. ಕೇಂದ್ರ ಸರ್ಕಾರವೂ ಕೂಡ ಈ ಬಗ್ಗೆ ರೈತರ ಪರವಾಗಿ ಸಮರ್ಥಿಸಿಕೊಳ್ಳಬೇಕೆಂದವರು ನುಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸದನದಲ್ಲಿ ಅಸಂವಿಧಾನಿಕ ಪದ ಬಳಕೆಗೆ ಖಂಡನೆ :

ರಾಜ್ಯ ಸರ್ಕಾರದ ಜವಾಬ್ದಾರಿಯುತ ಹುದ್ದೆಯಲ್ಲಿರುವ ಮಹಿಳಾ ಸಚಿವರ ಬಗ್ಗೆ ಮಾತನಾಡುವ ಭರದಲ್ಲಿ ಅಸಂವಿಧಾನಿಕ ಪದ ಬಳಸಿರುವುದು ಖಂಡನೀಯ ಮತ್ತು ಅತ್ಯಂತ ಬೇಜವಾಬ್ದಾರಿ ಹೇಳಿಕೆಯಾಗಿದೆ. ಅಸಭ್ಯ ಪದ ಬಳಕೆ ಮಾಡಿದ ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಲಯವು ಕಠಿಣ ದಂಡನೆಗೆ ಗುರಿಪಡಿಸಬೇಕೆಂದವರು ನುಡಿದರು.

ನಮ್ಮ ದೇಶದ ಸಂವಿಧಾನ ಎಲ್ಲರಿಗೂ ಎಲ್ಲ ರೀತಿಯ ಹಕ್ಕು ಮತ್ತು ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇವರಿಗೆ ಮಿಗಿಲಾದವರು. ಗಾಂಧಿ ಮತ್ತು ಅಂಬೇಡ್ಕರ್ ಈ ದೇಶದ ಎರಡು ಕಣ್ಣುಗಳು ಎಂದು ಬಣ್ಣಿಸಿದ ಅವರು, ದೇಶದ ಪ್ರಜಾಸತ್ತಾತ್ಮಕ ಸಾರ್ವಭೌಮ, ಮತ್ತು ಏಕತೆಯನ್ನು ಎತ್ತಿ ಹಿಡಿಯುವ ಪ್ರಧಾನಾಲಯದಲ್ಲಿ ಗೌರವಾನ್ವಿತ ಅಂಬೇಡ್ಕರ್ ಅವರ ಬಗ್ಗೆ ಜನಪ್ರತಿನಿಧಿಯೊಬ್ಬರು ಅವಹೇಳನಕಾರಿಯಾಗಿ ಮಾತನಾಡಿರುವುದು ಅತ್ಯಂತ ಖಂಡನೀಯ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ನಾಗರಾಜಗೌಡ ಹಾಗೂ ಆರ್.ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]