ಹೊಸನಗರ ; ವಿಕೃತ ಮನಸ್ಥಿತಿಯ ಪಾಪಿಗಳು ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ.
ಹಸುವಿನ ಮಾಲೀಕ ನವೀನ್ ಎಂಬುವರು ಹೊಸನಗರ ಠಾಣೆಯಲ್ಲಿ ದೂರು ನೀಡಿದ್ದು, ‘ಎಂದಿನಂತೆ ನಮ್ಮ ದನಗಳನ್ನು ಮೇಯಲು ಬಿಟ್ಟಿದ್ದು ಶನಿವಾರ ಸಂಜೆ 4:30ರ ಸುಮಾರಿಗೆ ಊರಿನ ಜನರು ಫೋನ್ ಕರೆ ಮಾಡಿ, ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿರುವುದಾಗಿ ವಿಷಯ ತಿಳಿಸಿದ್ದು ತಕ್ಷಣ ಸ್ಥಳಕ್ಕೆ ಧಾವಿಸಿ ನೋಡಿದಾಗ 9 ವರ್ಷ ಪ್ರಾಯದ ಕರು ಹಾಕಿದ ಮಲೆನಾಡು ಗಿಡ್ಡ ತಳಿಯ ನಮ್ಮ ದನದ ಕೆಚ್ಚಲಿನಿಂದ ರಕ್ತ ಸೋರುತ್ತಿರುವುದು ಕಂಡು ಬಂದಿದ್ದು ಯಾರೋ ದನದ ಕೆಚ್ಚಲು ಕೊಯ್ದಿರುವ ಬಗ್ಗೆ ಅನುಮಾನ ಬಂದಿದೆ. ನಂತರ ಗ್ರಾಮಸ್ಥರ ಸಹಾಯದಿಂದ ದನವನ್ನು ಮನೆಗೆ ಕರೆತಂದು ಪಶು ವೈದ್ಯ ಸಂತೋಷ್ ರಿಂದ ಹೊಲಿಗೆ ಹಾಕಿಸಿ ಚಿಕಿತ್ಸೆ ಕೊಡಿಸಿದ್ದೇವೆ’.

ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಹೊಸನಗರ ಪಿಎಸ್ಐ ಶಂಕರಗೌಡ ಪಾಟೀಲ್, ಪೊಲೀಸ್ ಸಿಬ್ಬಂದಿ ಗೋಪಾಲಕೃಷ್ಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

