ಹೊಸನಗರ ; ಕಳೆದ ಬಜೆಟ್ನಲ್ಲಿ ಎಲೆಚುಕ್ಕಿ ರೋಗಕ್ಕೆ ತುತ್ತಾದ ರಾಜ್ಯದ ಅಡಿಕೆ ಬೆಳೆಗಾರರಿಗೆ ಪರಿಹಾರವಾಗಿ 62 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಮೀಸಲಿಟ್ಟಿದ್ದು, ಈವರೆಗೆ ಕೇವಲ 7 ಕೋಟಿ ರೂ. ಬಿಡುಗಡೆ ಮಾಡಿದೆ. ಕೂಡಲೇ ಉಳಿಕೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ ಹಾಗು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ತಾಲೂಕಿನಲ್ಲೂ ಎಲೆಚುಕ್ಕೆ ರೋಗಕ್ಕೆ ಸಾವಿರಾರು ಎಕರೆ ಅಡಿಕೆ ತೋಟ ವ್ಯಾಪಕ ಹಾನಿಗೊಳಗಾಗಿ ರೈತಾಪಿ ವರ್ಗ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ವೇಳೆ ಶುಕ್ರವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಕೂಡಲೇ ಪರಿಹಾರದ ಉಳಿಕೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಅವರ ಮನವಿಗೆ ಮುಖ್ಯಮಂತ್ರಿಗಳ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತತಕ್ಷಣ ಉಳಿಕೆ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.

