ರಿಪ್ಪನ್ಪೇಟೆ : ನಾಲ್ಕು ಜಿಲ್ಲಾ ಸಂಪರ್ಕದ ಹೃದಯ ಭಾಗವಾಗಿರುವ ವಿನಾಯಕ ವೃತ್ತದ ರಸ್ತೆ ಅಗಲೀಕರಣ ಕಾಮಗಾರಿ ಮತ್ತು ಆಟೋ ನಿಲ್ದಾಣದ ಸಮಸ್ಯೆಯ ಕುರಿತು ಶಾಶ್ವತ ಪರಿಹಾರವನ್ನು ಕಲ್ಪಿಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಹತ್ತಿರ ಪ್ರಾಸ್ತಾಪಿಸಿದ ಮನವಿಗೆ ಸ್ಪಂದಿಸಿ ಖುದ್ದು ಶಾಸಕರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಲ್ಕು ರಸ್ತೆಯ ಅಗಲೀಕರಣ ಮತ್ತು ವಿನಾಯಕ ಸರ್ಕಲ್ ವಿಸ್ತರಣೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ನಂತರ ತೀರ್ಥಹಳ್ಳಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯದ ಪಕ್ಕದಲ್ಲಿ ಪ್ಯಾಸೆಂಜರ್ ಆಟೋ ನಿಲುಗಡೆಗೆ ಸ್ಥಳ ಗುರುತಿಸಿ ತಕ್ಷಣದಿಂದಲೇ ನಿಲುಗಡೆಗೆ ಅವಕಾಶ ಮಾಡಿಕೊಡುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸಂತೋಷರಿಗೆ ಶಾಸಕರು ಸೂಚಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ವಿನಾಯಕ ವೃತ್ತದಲ್ಲಿನ ನಾಲ್ಕು ರಸ್ತೆಯನ್ನು ಅಗಲೀಕರಣ ಮಾಡಿ ಡಾಂಬರೀಕರಣ ಕಾಮಗಾರಿ ಮಾಡಲಾಗಿದೆ. ಉಳಿದಂತೆ ಬಾಕ್ಸ್ ಚರಂಡಿ ಕಾಮಗಾರಿ ಪೂರ್ಣ ಹಂತ ತಲುಪಿದ್ದು ಅತಿ ಶೀಘ್ರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಕ್ತಗೊಳಿಸಲಾಗುವುದು ಎಂದು ಹೇಳಿ, ಮೂರು ಸೆಲ್ಟರ್ ನಿರ್ಮಾಣ ಹಾಗೂ ಸರ್ಕಲ್ ಬಳಿಯಲ್ಲಿ ಇರುವ ಆಲದ ಮರದ ಕೊಂಬೆಗಳನ್ನು ಕಟಾವು ಮಾಡಿ ಸುಂದರ ಆಕರ್ಷಕ ಪಟ್ಟಣವನ್ನಾಗಿ ಮಾಡುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಖಡಕ್ ಸೂಚನೆ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಲೋಕೋಪಯೋಗಿ ಇಲಾಖೆಯ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಆಟೋ ಚಾಲಕರು ಸಾರ್ವಜನಿಕರು ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





