ರಿಪ್ಪನ್ಪೇಟೆ : ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಸಂಪಳ್ಳಿ, ಕರಡಿಗ, ಬೆಳಕೋಡು, ಕೊಳವಳ್ಳಿ, ಯಡಗುಡ್ಡೆ ಭಾಗದ ಗ್ರಾಮಸ್ಥರು ಕೆಸರು ಗದ್ದೆಯಂತಾದ ರಸ್ತೆ ಮೇಲೆ ಭತ್ತದ ಸಸಿ ನಾಟಿ ಮಾಡುವ ಮೂಲಕ ಜೋಲಿಯಲ್ಲಿ ಅಣಕು ಪ್ರದರ್ಶನದ ಪ್ರತಿಭಟನೆ ನಡೆಸಿದ ಘಟನೆ ಕುರಿತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ದೂರವಾಣಿ ಮೂಲಕ ಸ್ಪಷ್ಟನೆ ನೀಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ದಿಗೆ ಅಗತ್ಯ ಪ್ರಮಾಣದ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಆರೋಪಿಸಿದರು.
ನಮ್ಮ ಕ್ಷೇತ್ರದ ಅನೇಕ ಗ್ರಾಮೀಣ ಭಾಗಗಳ ರಸ್ತೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರಂತರವಾಗಿ ಮನವಿ ಮಾಡುತ್ತಲೇ ಇದ್ದೇವೆ. ಆದರೆ ಅಗತ್ಯವಿರುವಷ್ಟು ಅನುದಾನ ಬಿಡುಗಡೆಯಾಗುತ್ತಿಲ್ಲ ಇದರಿಂದ ಗ್ರಾಮೀಣ ಭಾಗದ ರಸ್ತೆ ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಸಂಪಳ್ಳಿ, ಕರಡಿಗ, ಬೆಳಕೋಡು, ಗವಟೂರು ರಸ್ತೆ ಅಭಿವೃದ್ದಿಯನ್ನು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಈ ಹಿಂದೆಯೇ ಸೇರಿಸಲಾಗಿದ್ದು ಇದಕ್ಕೆ ಅನುಮೋದನೆಯೂ ದೊರೆತಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಆದರೆ ಜನಸಂಖ್ಯೆ ಆಧಾರಿತ ಮಾನದಂಡ ಸೇರಿದಂತೆ ಕೆಲವು ತಾಂತ್ರಿಕ ಕಾರಣಗಳಿಂದ ಯೋಜನೆ ಅನುಷ್ಟಾನಗೊಳ್ಳಲು ಸಾಧ್ಯವಾಗಿಲ್ಲ. ಈ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದ್ದು ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಲ್ಲಿಯವರೆಗೆ ಸಾರ್ವಜನಿಕರ ಓಡಾಡಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಮಾಡಿಕೊಡಲಾಗುವುದು ಎಂದು ಶಾಸಕ ಜ್ಞಾನೇಂದ್ರ ಭರವಸೆ ನೀಡಿದರು.
ರಸ್ತೆ ಸಮಸ್ಯೆ ಶಾಶ್ವತವಾಗಿ ಬಗೆಹರಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದು, ಇದೀಗ ಶಾಸಕರ ಭರವಸೆ ನಂತರ ರಸ್ತೆ ದುರಸ್ತಿ ಹಾಗೂ ಅಭಿವೃದ್ದಿ ಕಾಮಗಾರಿ ಯಾವಾಗ ಆರಂಭವಾಗಲಿದೆ ಎಂಬುದನ್ನು ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.

