ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ಸಂದರ್ಭದಲ್ಲಿ ಜಗದ್ಗುರು ಪಂಚಪೀಠಾಧೀಶ್ವರರಿಗೆ ಆಹ್ವಾನ ನೀಡಲಾಗಿತ್ತು. ಆದಾಗ್ಯೂ, ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಾರಣ ಅವರು ನೇರವಾಗಿ ಆಗಮಿಸಲು ಆಗುತ್ತಿಲ್ಲ. ಆದರೆ ನೂತನ ಮುಖ್ಯಮಂತ್ರಿ ಹಾಗೂ ಸರ್ಕಾರಕ್ಕೆ ಅವರು ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು, ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರು, ಶ್ರೀ ಕೇದಾರ ಭೀಮಾಶಂಕರಲಿಂಗ ಜಗದ್ಗುರು, ಶ್ರೀ ಶ್ರೀಶೈಲ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಜಗದ್ಗುರು, ಶ್ರೀ ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಜಗದ್ಗುರು ಮತ್ತು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಜಗದ್ಗುರುಗಳು ಜಂಟಿಯಾಗಿ ಪ್ರಕಟಿಸಿದ ಪತ್ರಿಕಾ ಹೇಳಿಕೆಯಲ್ಲಿ, ಧರ್ಮ ಮತ್ತು ರಾಜಕೀಯದ ಸಂಬಂಧದ ಮಹತ್ವವನ್ನು ಒತ್ತಿಹೇಳಿದ್ದಾರೆ.
“ಧರ್ಮದಲ್ಲಿ ರಾಜಕೀಯ ಇರಬಾರದು, ಆದರೆ ರಾಜಕೀಯದಲ್ಲಿ ಧರ್ಮವಿರಬೇಕು” ಎಂಬ ತತ್ವವನ್ನು ಮನಗಂಡು, ಡಿ.ಕೆ. ಶಿವಕುಮಾರ್ ಉತ್ತಮ ಆಡಳಿತದಿಂದ ರಾಜ್ಯದ ಜನರ ಸೇವೆ ಮಾಡಬೇಕು ಎಂದು ಆಶಿಸಿದ್ದಾರೆ.
ಜಾತಿ, ಮತ, ಪಂಥ, ಭಾಷೆ ಇತ್ಯಾದಿ ಎಲ್ಲ ಭೇದಭಾವಗಳನ್ನು ದೂರ ಮಾಡಿ, ಸರ್ವ ಜನಾಂಗದವರಿಗೂ ಸಮಾನ ಅವಕಾಶಗಳನ್ನು ನೀಡುವ ರೀತಿಯಲ್ಲಿ ಆಡಳಿತ ನಡೆಸಬೇಕೆಂದು ಅವರು ವಿನಂತಿಸಿದ್ದಾರೆ.
ಶ್ರೀ ರಂಭಾಪುರಿ ಲಿಂಗೈಕ್ಯ ಜಗದ್ಗುರು ವೀರಗಂಗಾಧರ ಅಜ್ಜಯ್ಯನವರ ಪರಮ ಶಿಷ್ಯರಾದ ಡಿ.ಕೆ. ಶಿವಕುಮಾರ್ “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂಬ ಮಹತ್ವದ ಸಂದೇಶವನ್ನು ಜಾಗೃತಗೊಳಿಸುವಲ್ಲಿ ಯಶಸ್ವಿಯಾಗಬೇಕು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ, ನೂತನ ಸಚಿವ ಸಂಪುಟಕ್ಕೆ ಸೇರುವ ಎಲ್ಲಾ ಸಚಿವರಿಗೂ ಜಗದ್ಗುರುಗಳು ಶುಭ ಹಾರೈಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





