ಆರೋಗ್ಯ ಕೇಂದ್ರಗಳಲ್ಲಿ ಹಾವು ಕಡಿತಕ್ಕೆ ಔಷಧಿ ಕಾಯ್ದಿರಿಸಿ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

Written by Mahesh Hindlemane

Published on:

ಶಿವಮೊಗ್ಗ ; ಹಾವು ಕಡಿತಕ್ಕೊಳಗಾದ ವ್ಯಕ್ತಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಸಾವು ಸಂಭವಿಸಬಹುದಾದ ಕಾರಣಗಳಿಂದಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾವು ಮತ್ತು ನಾಯಿ ಕಡಿತಕ್ಕೆ ಅಗತ್ಯವಿರುವ ಔಷಧಗಳನ್ನು ಸರ್ಕಾರದ ನಿಯಮಾನುಸಾರ ದಾಸ್ತಾನು ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

WhatsApp Group Join Now
Telegram Group Join Now
Instagram Group Join Now

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿನ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಿಕಾರಿಪುರ ತಾಲೂಕು ಹೋತನಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೊಳಪಡುವ ಮುಡುಬಸಿದ್ದಾಪುರದ 55 ವರ್ಷದ ಮಹಿಳೆ ಲೋಲಾಕ್ಷಮ್ಮ ಇವರು ಹಾವು ಕಡಿತಕ್ಕೆ ಒಳಗಾದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಶಿಫಾರಸ್ಸು ಮಾಡದೇ ನಾಟಿ ಔಷಧಿ ನೀಡಿ, ಮಹಿಳೆಯ ಸಾವಿಗೆ ಕಾರಣರಾದ ಗೌತಮಪುರ ಸಮೀಪದ ಕಣ್ಣೂರಿನ ನಾಟಿ ವೈದ್ಯ ವಾಸಪ್ಪ ಅವರ ಮೇಲೆ ಮೊಕದ್ದಮೆ ದಾಖಲಿಸುವಂತೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೇ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಅತಿಹೆಚ್ಚು ಹಾವು ಕಡಿತ ಮತ್ತು ಸಾವಿನ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಅಲ್ಲಿನ ವೈದ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸಿ, ಸಕಾಲಿಕವಾಗಿ ಚಿಕಿತ್ಸೆ ಕೊಡಿಸಿ, ಅಮೂಲ್ಯ ಜೀವ ರಕ್ಷಣೆಗೆ ಮುಂದಾಗುವಂತೆ ಅವರು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಹಂತದಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು ಕೇವಲ ಗರ್ಭಿಣಿ, ಬಾಣಂತಿಯರ ಬಗ್ಗೆ ಮಾತ್ರ ಗಮನ ಕೇಂದ್ರೀಕರಿಸದೇ ಗ್ರಾಮೀಣ ಜನರ ಆರೋಗ್ಯ ಮತ್ತು ಸಾಂದರ್ಭಿಕ ಅವಘಡಗಳ ಸಂದರ್ಭದಲ್ಲಿಯೂ ಅಗತ್ಯ ಸಲಹೆ-ಸೂಚನೆ ನೀಡಿ, ಚಿಕಿತ್ಸೆ ಕೊಡಿಸಲು ಗಮನಹರಿಸುವಂತೆ ಸೂಚಿಸಿದ ಅವರು, ಹಾವು ಮತ್ತು ನಾಯಿ ಕಡಿತದ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ತುಂಬಿ, ವಿಳಂಬಕ್ಕೆ ಅವಕಾಶವಿಲ್ಲದಂತೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಚಿಕಿತ್ಸೆ ಕೊಡಿಸಲು ಶ್ರಮಿಸುವಂತೆ ಸೂಚಿಸಿದ ಅವರು, ಗ್ರಾಮೀಣ ಜನರೂ ಕೂಡ ಆರೋಗ್ಯ ಸಂಬಂಧಿಸಿದ ತಮ್ಮ ತಕ್ಷಣದ ಅಗತ್ಯಗಳಿಗೆ ಆಶಾ ಕಾರ್ಯಕರ್ತರ ಸಲಹೆ-ಸಹಕಾರವನ್ನು ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಮಾತನಾಡಿ, ಈ ಸಂಬಂಧ ಜನಸಾಮಾನ್ಯರಿಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಿ. ಎಲ್ಲಾ ವೈದ್ಯರೂ ಕೂಡ ಹಾವು ಮತ್ತು ನಾಯಿ ಕಡಿತಕ್ಕೆ ಚಿಕಿತ್ಸೆ ನೀಡಬಹುದಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವ ಎಲ್ಲಾ ವೈದ್ಯರಿಗೆ ಸೂಕ್ತ ತರಬೇತಿ ನೀಡುವಂತೆಯೂ ಸೂಚಿಸಿದ ಅವರು, ಜಿಂಗಲ್ಸ್ಮೂಲಕ ಜನರಲ್ಲಿ ಅವರು ಮೂಡಿಸಲು ಕ್ರಮ ವಹಿಸುವಂತೆ ಅವರು ಸಲಹೆ ನೀಡಿದರು.

ಹಾವು ಕಡಿತದ ಅಮೂಲ್ಯ ಹಾಗೂ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಧಾವಿಸುವ ರೋಗಿಗೆ ವಿಳಂಬಕ್ಕೆ ಅವಕಾಶವಿಲ್ಲದಂತೆ ಹಾಗೂ ವೈದ್ಯರು ಯಾವುದೇ ನಿರ್ಲಕ್ಷ್ಯ ತೋರದಂತೆ ತ್ವರಿತವಾಗಿ ಚಿಕಿತ್ಸೆ ನೀಡಬೇಕು. ತಾಲೂಕು ವೈದ್ಯಾಧಿಕಾರಿಗಳು ಆಸ್ಪತ್ರೆಗಳಲ್ಲಿ ಸದಾ ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಬೇಕು. ಈ ಸಂಬಂಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದ ಅವರು, ಮೃತ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಪರಿಹಾರ ಧನ ದೊರೆಯುವಂತಿದ್ದಲ್ಲಿ ಅಗತ್ಯ ಸಲಹೆ-ಸಹಕಾರ ನೀಡುವಂತೆಯೂ ವೈದ್ಯರಿಗೆ ಸೂಚಿಸಿದರು.

108 ವಾಹನಗಳ ಸಿಬ್ಬಂಧಿಗಳೂ ಸಹ ಅನಗತ್ಯವಾಗಿ ವಿಳಂಬ ಮಾಡದೇ, ರೋಗಿಗೆ ಅಗತ್ಯವಾದ ಚಿಕಿತ್ಸೆಯ ಬಗ್ಗೆ ಯಾವ ಆಸ್ಪತ್ರೆಗೆ ಕೊಂಡೊಯ್ಯಬೇಕೆಂಬ ಬಗ್ಗೆ ತಕ್ಷಣದಲ್ಲಿ ನಿರ್ಣಯ ಕೈಗೊಂಡು, ತ್ವರಿತವಾಗಿ ತಮ್ಮ ಸಮೀಪದ ಆಸ್ಪತ್ರೆಗೆ ರೋಗಿಗಳನ್ನು ಕೊಂಡೊಯ್ದು ಚಿಕಿತ್ಸೆ ಕೊಡಿಸುವಲ್ಲಿ ಸಹಕರಿಸಬೇಕು ಎಂದರು.

ನಾಯಿಗಳ ಹಾವಳಿ :

ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ನಾಯಿಗಳ ಕಡಿತದ ಪ್ರಕರಣಗಳು ದಾಖಲಾಗಿವೆ. ಅವುಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೂಕ್ತ ಕೈಗೊಳ್ಳುವಂತೆ ಸೂಚಿಸಿದ ಅವರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಹೆಚ್ಚು ಸಂದರ್ಭದಲ್ಲಿ ಸಾಕು ನಾಯಿಗಳಿಂದಲೆ ಕಡಿತವಾಗಿರುವುದು ಕಂಡುಬರುತ್ತಿದೆ. ತಕ್ಷಣದ ಚಿಕಿತ್ಸೆಗಾಗಿ ರೇಬೀಸ್ಲಸಿಕೆಯನ್ನು ದಾಸ್ತಾನು ಇಟ್ಟುಕೊಂಡು ಕಡಿತಕ್ಕೊಳಗಾದವರಿಗೆ ಚಿಕಿತ್ಸೆ ಕೊಡುವಂತೆ ಸೂಚಿಸಿದ ಅವರು, ಈ ಸಂಬಂಧ ಶಾಲಾ ಮಕ್ಕಳಲ್ಲಿ ಪ್ರಾಥಮಿಕ ಅರಿವು ಮೂಡಿಸುವಂತೆಯೂ ಅವರು ಸಲಹೆ ನೀಡಿದರು.

ಶಾಲೆಗಳಲ್ಲಿ ಬಿಸಿಯೂಟದ ನಂತರ ಉಳಿದ ಆಹಾರ ಪದಾರ್ಥಗಳಿಗಾಗಿ ಬರುವ ನಾಯಿಗಳಿಂದಲೂ ನಾಯಿ ಕಡಿತ ಆಗಬಹುದಾದ ಸಂಭವವಿದ್ದು, ಶಾಲಾ ಶಿಕ್ಷಕರು ಮುಂಜಾಗ್ರತಾ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದವರು ನುಡಿದರು.

ಶಿವಮೊಗ್ಗ ಮಲೆನಾಡು ಪ್ರದೇಶವನ್ನು ಒಳಗೊಂಡಿರುವುದರಿಂದ ನಾಯಿ ಮತ್ತು ಹಾವು ಕಡಿತದ ಔಷಧವನ್ನು ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ಅವರು ವೈದ್ಯರಿಗೆ ಸೂಚಿಸಿದರು.

ರಾಜ್ಯದಲ್ಲಿ ರೂಪಾಂತರಿ ಕೋವೀಡ್ನ ಸೋಂಕು ಪ್ರಕರಣಗಳು ಕಂಡು ಬರುತ್ತಿದ್ದು, ಸಾರ್ವಜನಿಕರು ಸರ್ಕಾರವು ಈಗಾಗಲೇ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿ, ಬಾಣಂತಿಯರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಸೂಚಿಸಿದರು.

ಶಂಕಿತ ಹಾಗೂ ಜ್ವರ, ಕೆಮ್ಮು, ನೆಗಡಿ, ಶೀತ, ಉಸಿರಾಟ ಮುಂತಾದ ಗುಣಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯವಾಗಿ ಕೊರೋನ ಸೋಂಕಿನ ಕಫ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹಾಗೂ ಇಂದಿನಿಂದಲೇ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕಫ ಪರೀಕ್ಷೆಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.

ವಾಡಿಕೆಯಂತೆ ಜಿಲ್ಲೆಯಲ್ಲಿ ಸಕಾಲದಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳು ವಿಶೇಷ ಗಮನಹರಿಸಬೇಕು. ಜನಜಾಗೃತಿಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ, ಜನರಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸಬೇಕು ಎಂದವರು ನುಡಿದರು.

ಈ ಸಂದರ್ಭದಲ್ಲಿ ಡಾ. ಗುಡದಪ್ಪ ಕಸುಬಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ. ಅಗತ್ಯವಿರುವ ಇನ್ನಷ್ಟು ಸಿಬ್ಬಂಧಿಗಳನ್ನು ಬಾಹ್ಯ ಮೂಲದಿಂದ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ಡಾ. ನಾಗರಾಜ್ನಾಯ್ಕ್, ಡಾ. ಗುಡದಪ್ಪ ಕಸುಬಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment