ಸಾಗರ: ತಾಲೂಕು ವ್ಯಾಪ್ತಿಯಲ್ಲಿ ವರದಿಯಾಗುತ್ತಿರುವ ಗೋ ಕಳ್ಳತನ ಪ್ರಕರಣಗಳು ಹಾಗೂ ಶಿಕಾರಿಪುರದಲ್ಲಿ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದ್ದಾರೆ.
ಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋ ಕಳ್ಳತನ ತಡೆಗಟ್ಟಲು ಪೊಲೀಸ್ ಇಲಾಖೆ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸಾಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಗೋ ಕಳ್ಳತನ ತಡೆಗಾಗಿ ಪ್ರಮುಖ ನಾಲ್ಕು ಮಾರ್ಗಗಳಲ್ಲಿ ಹೆಚ್ಚುವರಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಈ ಮಾರ್ಗಗಳಲ್ಲಿ ವಾಹನಗಳ ತಪಾಸಣೆ ಹಾಗೂ ಸಂಶಯಾಸ್ಪದ ಚಲನವಲನಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದರು.
ಇಂತಹ ಪ್ರಕರಣಗಳಲ್ಲಿ ಮರುಮರು ಭಾಗಿಯಾಗುತ್ತಿರುವವರು ಹಾಗೂ ಹಳೆಯ ಪ್ರಕರಣಗಳಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳ ಮೇಲೂ ಪೊಲೀಸರು ವಿಶೇಷ ನಿಗಾ ಇಟ್ಟಿದ್ದಾರೆ. ಪುನರಾವರ್ತಿತ ಅಪರಾಧಗಳಲ್ಲಿ ಭಾಗಿಯಾದವರ ಜಾಮೀನು ರದ್ದತಿಗೆ ನ್ಯಾಯಾಲಯದ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಅಗತ್ಯವಿದ್ದಲ್ಲಿ ಅಂತಹ ಆರೋಪಿಗಳನ್ನು ಪುನಃ ಜೈಲಿಗೆ ಕಳುಹಿಸುವುದು ಮತ್ತು ಗಡಿಪಾರು ಮಾಡುವ ಕುರಿತು ಕೂಡ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ನಿಖಿಲ್ ಹೇಳಿದರು.
ಶಿಕಾರಿಪುರದಲ್ಲಿ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಾರ್ಯಾಚರಣೆ ಮುಂದುವರಿದಿದ್ದು, ತಪ್ಪಿತಸ್ಥರೆಲ್ಲರನ್ನೂ ಶೀಘ್ರದಲ್ಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವುದು ಪೊಲೀಸ್ ಇಲಾಖೆಯ ಪ್ರಮುಖ ಆದ್ಯತೆಯಾಗಿದೆ. ಗೋ ಕಳ್ಳತನ ಮತ್ತು ಹಲ್ಲೆ ಪ್ರಕರಣಗಳನ್ನು ಯಾವುದೇ ರೀತಿಯಲ್ಲೂ ಲಘುವಾಗಿ ಪರಿಗಣಿಸುವುದಿಲ್ಲ ಎಂದು ಎಸ್ಪಿ ನಿಖಿಲ್ ಎಚ್ಚರಿಕೆ ನೀಡಿದರು.

