ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ದಿಗಟೆಕೊಪ್ಪ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಶನಿವಾರ ನಡೆದ ವಿಸರ್ಜನಾ ಮೆರವಣಿಗೆಯಲ್ಲಿ ಬೆಳಕಿನ ವ್ಯವಸ್ಥೆಗಾಗಿ ಬಳಸಲಾಗುತ್ತಿದ್ದ ಜನರೇಟರ್ ಅಕಸ್ಮಾತ್ ಸ್ಫೋಟಗೊಂಡಿದ್ದು, ಸ್ಥಳೀಯ ಯುವಕ ಲೋಕೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಸ್ತಿಕಾಂಬಾ ಯುವಕ ಸಂಘದ ವತಿಯಿಂದ ಆಯೋಜಿಸಲಾದ ಮೆರವಣಿಗೆಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಲೋಕೇಶ್ ಅವರ ಎರಡೂ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ತಕ್ಷಣವೇ ಯುವಕ ಸಂಘದ ಸದಸ್ಯರು ಹಾಗೂ ಸ್ಥಳೀಯರು ಗಾಯಾಳುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದ ಕಾರಣ, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಈ ವಿಷಯ ತಿಳಿದಂತೆಯೇ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶಿವಮೊಗ್ಗದ ಎನ್.ಎಚ್. ಆಸ್ಪತ್ರೆ ಭೇಟಿ ನೀಡಿ ಗಾಯಾಳು ಲೋಕೇಶ್ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಅಗತ್ಯ ನೆರವು ದೊರಕುವಂತೆ ಭರವಸೆ ನೀಡಿದರು. ಜೊತೆಗೆ ಲೋಕೇಶ್ ಅವರು ಬೇಗ ಗುಣಮುಖರಾಗಬೇಕೆಂದು ಹಾರೈಸಿದರು.
ಸ್ಥಳೀಯರು ಈ ಘಟನೆಗೆ ಬೇಸರ ವ್ಯಕ್ತಪಡಿಸಿದ್ದು, ಹಬ್ಬದ ಸಂಭ್ರಮದ ನಡುವೆ ನಡೆದ ದುರಂತ ಮನಸ್ಸಿಗೆ ನೋವುಂಟುಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪೊಲೀಸರು ಘಟನೆ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.