ರಿಪ್ಪನ್ಪೇಟೆ ; ಮೇ 26 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗಾಗಿ ಸವಿತಾ ಸಮಾಜದ ಬಡ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ರಿಪ್ಪನ್ಪೇಟೆ ಹೋಬಳಿ ಸವಿತಾ ಸಮಾಜದ ಅಧ್ಯಕ್ಷ ಸಿದ್ದಪ್ಪ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಲಾಯಿತು.
ರಿಪ್ಪನ್ಪೇಟೆಯಲ್ಲಿ ಶಿವಮೊಗ್ಗ ಸವಿತಾ ಸಮಾಜದ ಜಿಲ್ಲಾ ಯುವ ಘಟಕದ ಕಾರ್ಯಕಾರಿ ಸಮಿತಿಯ ಸಭೆ ಹಾಗೂ ನೋಟ್ ಬುಕ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸಮಾಜದ ಹಲವು ಮಹತ್ವಪೂರ್ಣ ವಿಷಯಗಳನ್ನು ಚರ್ಚಿಸುವುದರೊಂದಿಗೆ ಪ್ರತಿವರ್ಷದಂತೆ ಈ ವರ್ಷವೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಡಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮದ ಬಗ್ಗೆ ಸಹ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಯಿತು.
ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮೇ 26 ರಂದು ನಡೆಸಲಾಗುವುದು ಅಷ್ಟರೊಳಗೆ ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ತಾಲ್ಲೂಕು ಹೋಬಳಿ ಮಟ್ಟದ ಸವಿತಾ ಸಮಾಜದವರನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು ತುಂಬಿ ಸಮಿತಿಗೆ ನೀಡುವಂತೆ ತಿಳಿಸಿದ್ದಾರೆ.
ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ರಾಘವೇಂದ್ರ ಶಿಕಾರಿಪುರ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಭಂಡಾರಿ, ಶಿವಮೊಗ್ಗ ತಾಲ್ಲೂಕು ಅಧ್ಯಕ್ಷ ಬಿ.ಎನ್.ಧರ್ಮರಾಜು, ಪ್ರಧಾನ ಕಾರ್ಯದರ್ಶಿ ಧನಂಜಯ್, ಹಿರಿಯಣ್ಣ ಭಂಡಾರಿ, ಸುನೀಲ್, ಸಾಗರದ ರಾಘವೇಂದ್ರ ಭಂಡಾರಿ, ಮಂಜುನಾಥ ಭಂಡಾರಿ ಹಾಗೂ ಇನ್ನಿತರ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





