ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳೆಲ್ಲರನ್ನೂ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರ ಪ್ರಕಾರ, ಇಂದು ಬೆಳಗ್ಗೆ ಖಾಸಗಿ ಬಸ್ ಶಿವಮೊಗ್ಗದಿಂದ ಶಿಕಾರಿಪುರ ಪಟ್ಟಣವನ್ನು ಪ್ರವೇಶಿಸಿದಾಗ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕ, ತನ್ನ ಮುಂದೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡಕ್ಕೆ ತಿರುಗಿಸಿದ್ದಾನೆ. ಹೀಗಾಗಿ ಬಸ್ ಡಿವೈಡರ್ ದಾಟಿ ಪಲ್ಟಿಯಾಗಿದ್ದು ಬಸ್ನಲ್ಲಿದ್ದ 17ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ.

ತಕ್ಷಣವೇ ಗಾಯಾಳುಗಳನ್ನು ಶಿಕಾರಿಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಕೆಲವರಿಗೆ ಕೈ-ಕಾಲು ಮುರಿತವಾದ ಕಾರಣಕ್ಕೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಲ್ಲಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ಘಟನೆಯ ದೃಶ್ಯ ಸುತ್ತಮುತ್ತಲ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

