ಶಿವಮೊಗ್ಗ: ಸಮಸ್ಯೆಗಳಿಗೆ ಪರಿಹಾರ ಹುಡುಕಿಕೊಂಡು ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೆ, ತಾಳ್ಮೆಯಿಂದ ಅವರ ಮನವಿಗಳನ್ನು ಆಲಿಸಿ ಸಮಯಕ್ಕೆ ಸರಿಯಾಗಿ ಕೆಲಸ ಮಾಡಿಕೊಡಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರೊಂದಿಗೆ ಅಧಿಕಾರದ ಧೋರಣೆಯಲ್ಲಿ ವರ್ತಿಸುವ ಬದಲು, ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಮಾನವೀಯವಾಗಿ ಸ್ಪಂದಿಸಬೇಕು. ಜನರಿಗೆ ತೃಪ್ತಿಕರ ಸೇವೆ ನೀಡುವುದರಿಂದ ಅಧಿಕಾರಿಗಳಿಗೂ ಸೇವೆಯ ಸಾರ್ಥಕತೆ ದೊರೆಯುತ್ತದೆ ಎಂದು ಹೇಳಿದರು.
ಪ್ರಜಾಸೇವಾ ಆಂದೋಲನದ ಉದ್ದೇಶವೇ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗಬಾರದು ಎಂದು ಅವರು ಸೂಚಿಸಿದರು.
ಹಾರನಹಳ್ಳಿ ಭಾಗದಲ್ಲಿ ಮಳೆ ಕೊರತೆ ಬಗ್ಗೆ ಆತಂಕ
ಹಾರನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಹಲವು ಕೆರೆ, ಕಟ್ಟೆ ಮತ್ತು ಕಾಲುವೆಗಳಲ್ಲಿ ನೀರಿನ ಕೊರತೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಶಾಸಕಿ ಆತಂಕ ವ್ಯಕ್ತಪಡಿಸಿದರು.
ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ತ್ವರಿತಗೊಳಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಮಾಪನ ಕೇಂದ್ರಗಳ ನಿರ್ವಹಣೆಯಲ್ಲೂ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ರೈತರಿಗೆ ಬೆಳೆ ವಿಮೆ ನೀಡುವ ಸಂದರ್ಭದಲ್ಲಿ ಕೇವಲ ಮಳೆಮಾಪನ ಕೇಂದ್ರದ ವರದಿಯನ್ನೇ ಆಧಾರವಾಗಿಸದೆ, ಸ್ಥಳೀಯ ವಾಸ್ತವ ಪರಿಸ್ಥಿತಿಯನ್ನೂ ಪರಿಶೀಲಿಸಬೇಕು ಎಂದು ಹೇಳಿದರು.
ಸಾರ್ವಜನಿಕರಿಂದ ಹಲವು ಅಹವಾಲು
ಸಭೆಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಮಾಸಾಶನ, ಶಾಲೆಗೆ ಅಡುಗೆ ಕೋಣೆ, ರೈಲ್ವೆ ನಿಲ್ದಾಣದಲ್ಲಿ ಬೆಳಕಿನ ವ್ಯವಸ್ಥೆ, ಬಾಕ್ಸ್ ಚರಂಡಿ ಹಾಗೂ ಸ್ಮಶಾನ ಭೂಮಿ ಮಂಜೂರಾತಿ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಸೀಲ್ದಾರ್ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

