ಶಿವಮೊಗ್ಗ: ಜಿಲ್ಲೆಯಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ — SIR — ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಮತದಾರರು ಸ್ಥಳೀಯ ಬಿಎಲ್ಒ ಕಚೇರಿ ಅಥವಾ ಚುನಾವಣಾ ಆಯೋಗದ ಅಧಿಕೃತ ಜಾಲತಾಣದ ಮೂಲಕ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಳ್ಳಬಹುದು ಎಂದು ಹೇಳಿದರು.
ಪ್ರಸ್ತುತ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಿಂದ ಸುಮಾರು 48,668 ಮತದಾರರ ಹೆಸರುಗಳನ್ನು ಹೊರಗಿಡಲಾಗಿದೆ. ಈ ಪೈಕಿ ಮ್ಯಾಪಿಂಗ್ ಆಗದ 15,164 ಮತದಾರರು ಹಾಗೂ ತಂದೆ-ಮಗನ ವಯಸ್ಸಿನ ಅಸಾಮಾನ್ಯ ಅಂತರ ಸೇರಿದಂತೆ ದೋಷಪೂರಿತ ಮಾಹಿತಿ ಕಂಡುಬಂದ 33,504 ಮತದಾರರಿಗೆ ನೋಟಿಸ್ ನೀಡಲಾಗುತ್ತದೆ ಎಂದು ತಿಳಿಸಿದರು.
ನೋಟಿಸ್ ಪಡೆದ ಮತದಾರರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಪೌರತ್ವವನ್ನು ದೃಢಪಡಿಸಬೇಕಾಗುತ್ತದೆ. ಮ್ಯಾಪಿಂಗ್ ಪ್ರಕ್ರಿಯೆಗೆ ನಿಗದಿತ ಕಾಲಾವಕಾಶ ನೀಡಲಾಗುತ್ತದೆ. ಪಟ್ಟಿಯಲ್ಲಿ ಹೆಸರು ಇಲ್ಲದವರು ಅಥವಾ ಆಕ್ಷೇಪಣೆ ಸಲ್ಲಿಸಬೇಕಾದವರು ಸೆಪ್ಟೆಂಬರ್ 23ರವರೆಗೆ ಅವಕಾಶ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಜೂನ್ 16, 2026ರ ಮತಪಟ್ಟಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 15,19,459 ಮತದಾರರು ಇದ್ದರು. ಇವರಲ್ಲಿ 13,30,905 ಮತದಾರರ ಹೆಸರುಗಳನ್ನು ಅಧಿಕೃತಗೊಳಿಸಿ ಗಣಕೀಕರಣ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂದರೆ ಶೇ.87.59ರಷ್ಟು ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
SIR ಪ್ರಕ್ರಿಯೆಯಲ್ಲಿ 1,88,554 ಮತದಾರರನ್ನು ASDDO ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಕಾಣಿಸುವುದಿಲ್ಲ. ಇದರಲ್ಲಿ 46,683 ಮಂದಿ ಮೃತಪಟ್ಟಿರುವುದು, 23,165 ಮಂದಿ ಗೈರಾಗಿರುವುದು ಹಾಗೂ 99,225 ಮಂದಿ ಸ್ಥಳಾಂತರಗೊಂಡಿರುವುದು ಗುರುತಿಸಲಾಗಿದೆ ಎಂದು ಹೇಳಿದರು.
ಕರಡು ಪಟ್ಟಿಯಿಂದ ಹೊರಗುಳಿದಿರುವವರು ಅಥವಾ ಹೆಸರು ಸೇರ್ಪಡೆ ಮಾಡಿಸಬೇಕಾದವರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಸಲ್ಲಿಸಬೇಕು. ಅಕ್ಟೋಬರ್ 1ಕ್ಕೆ 18 ವರ್ಷ ತುಂಬುವ ಯುವ ಮತದಾರರೂ ಫಾರ್ಮ್ 6 ಮೂಲಕ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು.
ಹೆಸರು, ವಿಳಾಸ ಅಥವಾ ಇತರೆ ತಿದ್ದುಪಡಿ ಬೇಕಿದ್ದರೆ ನಮೂನೆ 8 ಮೂಲಕ ಅರ್ಜಿ ಸಲ್ಲಿಸಬಹುದು. ಮತಗಟ್ಟೆ ಅಧಿಕಾರಿಗಳ ಪರಿಶೀಲನೆಯ ನಂತರ ಪೌರತ್ವ ದೃಢಪಟ್ಟರೆ ಮಾತ್ರ ಅಂತಿಮ ಮತದಾರರ ಪಟ್ಟಿಗೆ ಹೆಸರು ಸೇರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರಿಗೆ ಸಕಾಲಿಕ ಮಾಹಿತಿ ನೀಡಲಾಗಿದೆ. ಇಲ್ಲಿಯವರೆಗೆ ಸಾರ್ವಜನಿಕರಿಂದಾಗಲೀ, ರಾಜಕೀಯ ಪಕ್ಷಗಳಿಂದಾಗಲೀ ಯಾವುದೇ ಆಕ್ಷೇಪಣೆಗಳು ಬಂದಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಗತ್ಯವಿರುವಂತೆ ಇ.ಆರ್.ಒ ಮತ್ತು ಎ.ಇ.ಆರ್.ಒಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ
ಜಿಲ್ಲೆಯಲ್ಲಿ ಯುವಕರ ಸಬಲೀಕರಣಕ್ಕಾಗಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಒಟ್ಟು 356 ಸಂಘಗಳು ಹಾಗೂ 35,600 ಸದಸ್ಯರನ್ನು ಒಳಗೊಂಡ ಸಂಘಟನೆಗಳನ್ನು ರಚಿಸುವ ಉದ್ದೇಶವಿದೆ.
ಈವರೆಗೆ 28,137 ಮಂದಿ ಸದಸ್ಯರಾಗಿದ್ದು, ಸಂಘಗಳ ರಚನೆಯಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಈ ಯೋಜನೆ ಯುವಜನರಲ್ಲಿ ನಾಯಕತ್ವ, ಸಮುದಾಯದ ಭಾಗವಹಿಸುವಿಕೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ವೈಜ್ಞಾನಿಕ ಮನೋಭಾವ, ಜವಾಬ್ದಾರಿಯುತ ನಾಗರಿಕತ್ವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಸೆಪ್ಟೆಂಬರ್ನಿಂದ ಪ್ರಜಾಸೇವಾ ಸಭೆಗಳು
ಸರ್ಕಾರದ ಮಾರ್ಗಸೂಚಿಯಂತೆ ಸೆಪ್ಟೆಂಬರ್ ತಿಂಗಳಿಂದ ಪ್ರಜಾಸೇವಾ ಚಟುವಟಿಕೆಗಳು ಆರಂಭವಾಗಲಿವೆ. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ವಾರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಗಳು ನಡೆಯಲಿವೆ.
ಎರಡನೇ ಮತ್ತು ನಾಲ್ಕನೇ ಶನಿವಾರಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಗರ, ಪಟ್ಟಣ, ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಆಹಾರ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮ
ಆಹಾರ ಸುರಕ್ಷತೆ ಕುರಿತು ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಈ ಸಂಬಂಧ ಸಾರ್ವಜನಿಕರಿಂದ ಬಂದಿರುವ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಚುನಾವಣಾ ತಹಶೀಲ್ದಾರ್ ಮಂಜುಳಾ ಹೆಗಡಾಳ ಹಾಗೂ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

