ಶಿವಮೊಗ್ಗ: ಕಾರ್ಮಿಕರ ಆರೋಗ್ಯ ಸುರಕ್ಷತೆ ಮತ್ತು ಇಎಸ್ಐಸಿ ಕಾರ್ಡ್ದಾರರ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ಲೋಪ ಸಹಿಸುವುದಿಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಶಾಸಕರ ಕಚೇರಿಯಲ್ಲಿ ಇಎಸ್ಐಸಿ ಇಲಾಖೆಯ ಹಿರಿಯ ಅಧಿಕಾರಿಗಳು, ವೈದ್ಯರು ಹಾಗೂ ಕಾರ್ಮಿಕ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಕಾರ್ಮಿಕರ ಆರೋಗ್ಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಇಎಸ್ಐ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಕಾರ್ಮಿಕರು ತೊಂದರೆ ಅನುಭವಿಸುತ್ತಿರುವ ವಿಚಾರವನ್ನು ಶಾಸಕರು ಗಂಭೀರವಾಗಿ ಪರಿಗಣಿಸಿದರು. ಕೂಡಲೇ ಒಪಿಡಿ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಇದಕ್ಕೆ ಅಗತ್ಯವಿರುವ ಹೆಚ್ಚುವರಿ ಕೊಠಡಿ ಮತ್ತು ಸ್ಥಳಾವಕಾಶವನ್ನು ತಕ್ಷಣ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಹುದ್ದೆಗಳು ಖಾಲಿ ಇರುವ ಕುರಿತು ಮಾಹಿತಿ ಪಡೆದ ಚನ್ನಬಸಪ್ಪ, ಈ ಕೊರತೆಯನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕೆಂದು ಹೇಳಿದರು. ಈ ಸಂಬಂಧ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ತಕ್ಷಣ ವೈದ್ಯರನ್ನು ನಿಯೋಜಿಸಲು ಒತ್ತಾಯಿಸಿದರು.
ಇಎಸ್ಐಸಿ ಕಾರ್ಡ್ದಾರರಿಗೆ ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂಬ ದೂರುಗಳನ್ನೂ ಸಭೆಯಲ್ಲಿ ಚರ್ಚಿಸಲಾಯಿತು. ಅಂತಹ ಆಸ್ಪತ್ರೆಗಳ ವಿರುದ್ಧ ಪರಿಶೀಲನೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತುರ್ತು ಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ತೆರಳಲು ಅಗತ್ಯವಿರುವ ಶಿಫಾರಸು ಪತ್ರ ನೀಡುವಲ್ಲಿ ವಿಳಂಬ ಮಾಡಬಾರದು. ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ, ಜೀವರಕ್ಷಕ ಔಷಧಿ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆ ಲಭ್ಯವಾಗಬೇಕು ಎಂದು ಅವರು ಸೂಚಿಸಿದರು.
ಪ್ರತಿಯೊಬ್ಬ ಇಎಸ್ಐಸಿ ಕಾರ್ಡ್ದಾರ ಕಾರ್ಮಿಕನಿಗೂ ಅಡೆತಡೆ ಇಲ್ಲದೆ ವೈದ್ಯಕೀಯ ಸೌಲಭ್ಯ ಸಿಗುವಂತೆ ಪೂರ್ಣ ಪ್ರಮಾಣದ ವ್ಯವಸ್ಥೆ ಮಾಡಬೇಕು. ಕಾರ್ಮಿಕರ ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಬಸಪ್ಪ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಇಎಸ್ಐಸಿ ಅಧಿಕಾರಿ ಬಸವನಗೌಡ, ಕಾರ್ಮಿಕ ಮುಖಂಡ ರಾಜು ಸಾಬ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಕಾರ್ಮಿಕ ಅಧಿಕಾರಿಗಳು, ಇಎಸ್ಐಸಿ ವೈದ್ಯಾಧಿಕಾರಿಗಳು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

