ಶಿವಮೊಗ್ಗ: ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರಮುಖ ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ ಒಟ್ಟು 30 ದಿನಗಳ ಕಾಲ ಜಿಲ್ಲೆಯಲ್ಲಿ ಡಿಜೆ ಸಿಸ್ಟಂ ಬಳಕೆ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಮತ್ತು ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಲಾಗಿದೆ.
ಸೆಪ್ಟೆಂಬರ್ 14ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ಆಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಹೆಚ್ಚಿನ ಶಬ್ದ, ಸಿಡಿಮದ್ದು, ವಾಹನ ರ್ಯಾಲಿ ಹಾಗೂ ಬ್ಲಾಸ್ಟಿಂಗ್ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು, ವಯೋವೃದ್ಧರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಸಾಮಾನ್ಯ ನಾಗರಿಕರಿಗೆ ಅಡಚಣೆ ಉಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35 ಮತ್ತು 36ರಡಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಜಿಲ್ಲಾಧಿಕಾರಿಗಳು ಈ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

