ಹೊಸನಗರ ; ಗ್ರಾ.ಪಂ. ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಳಲಿ ಶ್ರೀನಿವಾಸ್ ರೆಡ್ಡಿ ಆಯ್ಕೆ
ಹೊಸನಗರ : ತಾಲೂಕು ಗ್ರಾಮ ಪಂಚಾಯತಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಮಳಲಿ ಶ್ರೀನಿವಾಸ ರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ.
ಇಲ್ಲಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ಅಧ್ಯಕ್ಷರ ಸಮ್ಮುಖದಲ್ಲಿ ಸೋಮವಾರ ಒಕ್ಕೂಟದ ನೂತನ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಆರ್. ಮುಂಜುನಾಥ್, ಖೈರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ, ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸುಧಾ ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಸೊನಲೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕೃಷ್ಣಮೂರ್ತಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಸಹ ಕಾರ್ಯದರ್ಶಿಯಾಗಿ ಮಾರುತಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಆರ್. ಕೆ. ದೀಪಿಕಾ ಹಾಗೂ ಸಂಚಾಲಕರಾಗಿ ಮೂಡಗೊಪ್ಪ ಗ್ರಾಮ ಪಂಚಾಯತಿ ಸದಸ್ಯ ಕರುಣಾಕರ ಶೆಟ್ಟಿ, ಒಕ್ಕೂಟದ ಮಾಜಿ ಅಧ್ಯಕ್ಷ, ಮಾರುತಿಪುರ ಗ್ರಾಮ ಪಂಚಾಯತಿ ಹಾಲಿ ಸದಸ್ಯ ಹೆಚ್.ಬಿ. ಚಿದಂಬರ ಆಯ್ಕೆ ಆಗಿದ್ದಾರೆ.
ಇದೇ ವೇಳೆ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಕಾಂಗ್ರೆಸ್ ಮುಖಂಡ, ಹಾಲಗದ್ದೆ ಉಮೇಶ್ ಅಭಿನಂದಿಸಿದ್ದಾರೆ.