ರಿಪ್ಪನ್ಪೇಟೆ: ಮೂಗುಡ್ತಿ ಗ್ರಾಮದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೂಗುಡ್ತಿ-ತಳಲೆ ಮಾರ್ಗದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಹಿಂಬದಿಯ ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನೆಲೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳೀಯರು ಹಾಗೂ ಹೆದ್ದಾರಿಪುರ ಗ್ರಾಪಂ ಸದಸ್ಯ ಪ್ರವೀಣ್ ಸುಳುಗೋಡು ಇಬ್ಬರನ್ನು ಹೊರತೆಗೆದು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ.
ಮಂಜುನಾಥ್ ಎಂಬುವವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿರುವುದರಿಂದ ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಹಿನ್ನಲೆಯಲ್ಲಿ ಮೂಗುಡ್ತಿ-ತಳಲೆ ಸಂಚಾರ ವ್ಯತ್ಯಯವಾಗಿತ್ತು.
ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.