ಮಳೆಹಾನಿ ಕುರಿತು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳ ಜೊತೆ ಸಮಲೋಚನಾ ಸಭೆ
ರಿಪ್ಪನ್ಪೇಟೆ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಂಡಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಲ್ಲಿ 16 ಮನೆಗಳು ಹಾನಿಗೊಳಗಾಗಿದ್ದು 13 ಮನೆಗಳು ಭಾಗಶಃ ಹಾನಿಗೀಡಾಗಿದ್ದರೆ 2 ಮನೆಗಳು ಸಂಪೂರ್ಣ ಕುಸಿದು ಬಿದ್ದಿವೆ. ಮೂರು ಜಾನುವಾರಗಳ ಕೊಟ್ಟಿಗೆ ಸಹ ಹಾನಿಯಾಗಿವೆ. ನವಟೂರು ಗ್ರಾಮದ ಸರ್ವೇ ನಂಬರ್ 35 ರಲ್ಲಿ ಕೆರೆ ದಂಡೆ ಒಡೆದು ನೀರು ನುಗ್ಗಿ 2 ಎಕರೆ ನಾಟಿ ಮಾಡಿದ ಗದ್ದೆ ಕೊಚ್ಚಿಹೋಗಿದೆ ಹಾಗೂ ಐದು ಜಾನುವಾರುಗಳು ಸಾವನ್ನಪ್ಪಿವೆ ಎಂದು ಸಚಿವರಿಗೆ ಸಾಗರ ಉಪವಿಭಾಗಾಧಿಕಾರಿಗಳು ಮಾಹಿತಿ ನೀಡಿದರು. ಅಧಿಕಾರಿಗಳ ಮಾಹಿತಿಯನ್ನು ಪಡೆದ ಸಚಿವರು ಕ್ಷೇತ್ರದ ಶಾಸಕರ ಗಮನಕ್ಕೆ ತಂದು ಆ ಮೂಲಕ ಸರ್ಕಾರದ ಗಮನಸೆಳೆಯುವಂತೆ ತಿಳಿಸಿ ನೋಂದವರಿಗೆ ಶೀಘ್ರದಲ್ಲಿ ತುರ್ತು ಪರಿಹಾರ ಕಲ್ಪಿಸಲಾಗುವುದೆಂದ ಅವರು, ಸರ್ಕಾರದ ನೆರೆಪರಿಹಾರ ಯೋಜನೆಯಡಿ ಜಿಲ್ಲಾಧಿಕಾರಿಗಳು ತುರ್ತು ಪರಿಹಾರವಾಗಿ ಮನೆಹಾನಿಗೊಳಗಾದ ಕುಟುಂಬಕ್ಕೆ 10 ಸಾವಿರ ರೂ. ಪರಿಹಾರ ನೀಡುವಂತೆ ಸೂಚಿಸಿ ಹಾನಿಗೊಳಗಾದ ಮನೆಗಳ ಫಲಾನುಭವಿಗಳಿಗೆ ಎ.ಬಿ.ಸಿ.ಮಾನದಂಡ ಮಾಡಿರುವುದು ಸಂಜಸವಲ್ಲ ಅವರಿಗೆ ಪೂರ್ಣ ಪ್ರಮಾಣದ ಮನೆ ನಿರ್ಮಿಸಿಕೊಳ್ಳಲು ಸರ್ಕಾರಿದಂದ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರ ಸ್ಥಳದಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಕ್ಷಣವೇ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪುಸ್ತಕದ ಕೊರತೆ ಇದ್ದರೆ ಪಕ್ಕದ ಶಾಲೆಗಳಲ್ಲಿ ಹೆಚ್ಚುವರು ಪುಸ್ತಕಗಳನ್ನು ಪಡೆದು ವಿತರಿಸುವಂತೆ ಸೂಚಿಸಿದರು ಮತ್ತು ಪದವಿ ಪೂರ್ವ ಕಾಲೇಜ್ಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ 3500 ಕ್ಕೂ ಅಧಿಕ ಉಪನ್ಯಾಸಕರಿಗೆ ಕಳೆದ ಸಾಲಿನಲ್ಲಿ ಬಾಕಿ ಇರುವ ಗೌರವ ಸಂಭಾವನೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಲು ಕ್ರಮಕೈಗೊಳ್ಳವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ಕುಮಾರ್, ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ನೇಹಲ್ ಸುಧಾಕರ್ ಲೋಕಕಂಡೆ,ಸಾಗರ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ಡಿಡಿಪಿಐ ಪರಮೇಶ್ವರಪ್ಪ, ತಹಶೀಲ್ದಾರ್ ಡಿ.ಜಿ.ಕೋರಿ, ಬಿ.ಇ.ಓ. ಹೆಚ್.ಆರ್.ಕೃಷ್ಣಮೂರ್ತಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟನಾಯ್ಕ್, ತಾ.ಪಂ.ಇಓ ನರೇಂದ್ರ, ಗ್ರಾ.ಪಂ ಅಧ್ಯಕ್ಷ ಮಂಜುಳಾ, ಉಪಾಧ್ಯಕ್ಷೆ ಮಹಾಲಕ್ಷ್ಮಿ ಇನ್ನಿತರ ಅಧಿಕಾರಿಗಳು ಹಾಜರಿದ್ದರು.