ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಕಲ ಸಿದ್ದತೆ : ಡಾ.ಸೆಲ್ವಮಣಿ ಆರ್

0 34


ಶಿವಮೊಗ್ಗ : ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.


ಸರ್ಕಾರಿ ನೌಕರರ ಭವನದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಪರೀಕ್ಷಾ ಅಧಿಕಾರಿಗಳೊಂದಿಗೆ ಚರ್ಚಿಸಲು ಶುಕ್ರವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 02 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಒಟ್ಟು 23372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 22068 ರೆಗ್ಯೂಲರ್ ವಿದ್ಯಾರ್ಥಿಗಳು, 814 ಪುನರಾವರ್ತಿತ ವಿದ್ಯಾರ್ಥಿಗಳು, 357 ಖಾಸಗಿಯಾಗಿ ನೊಂದಾಯಿಸಿ ವಿದ್ಯಾರ್ಥಿಗಳು, 133 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ.


94 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 94 ಮುಖ್ಯ ಅಧೀಕ್ಷಕರು, 31 ಅನ್ಯ ಇಲಾಖಾ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 33 ಮಾರ್ಗಗಳನ್ನು ರಚಿಸಲಾಗಿದ್ದು, 33 ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ 350 ಕ್ಕೂ ಹೆಚ್ಚು ಇರುವ ಕಡೆ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 11 ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ.


ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸಮರ್ಪಕ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಸಂಬಂಧಿಸಿದ ಬಿಇಓಗಳು ಪರಿಶೀಲಿಸಿ ವರದಿ ನೀಡಿರುತ್ತಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿ ಟಿವಿ ಇಲ್ಲದ ಕಡೆ ಅದಕ್ಕೆ ವ್ಯವಸ್ಥೆ ಮಾಡಬೇಕು ಎಂದು ಡಿಡಿಪಿಐ ಅವರಿಗೆ ಸೂಚನೆ ನೀಡಿದರು.


ಕೆಲವು ಹಳ್ಳಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಅಥವಾ ಬಸ್ ನಿಲುಗಡೆ ಇರುವುದಿಲ್ಲ. ಇಂತಹ ಸಮಸ್ಯೆಗಳನ್ನು ತಾಲೂಕುಗಳ ಬಿಇಓ ಗಳು ಪರಿಶೀಲಿಸಿ ಕೂಡಲೇ ವರದಿ ನೀಡಬೇಕು. ಅಂತಹ ಕಡೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು.


ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.


ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿಗಳು ಅತ್ಯಂತ ಮುತುವರ್ಜಿಯಿಂದ ಪರೀಕ್ಷಾ ಕರ್ತವ್ಯವನ್ನು ನಿರ್ವಹಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಿರಬೇಕಾದ ಸಮಯ ಮತ್ತಿತರೆ ಸೂಚನೆಗಳ ಕುರಿತು ತಿಳುವಳಿಕೆ ನೀಡಬೇಕು.
ಯಾವುದೇ ರೀತಿಯ ಅಡಚಣೆ, ಅವ್ಯವಸ್ಥೆ ಆಗದಂತೆ ವ್ಯವಸ್ಥಿತವಾಗಿ ಮತ್ತು ಸುಗಮವಾಗಿ ಪರೀಕ್ಷೆಯನ್ನು ನಡೆಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡು, ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಯ ಮುಖ್ಯ ಅಧೀಕ್ಷಕರು, ಸಹಾಯಕ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಮತ್ತು ವೀಕ್ಷಕರು ಅನುಸರಿಸಬೇಕಾದ ಮಾರ್ಗಸೂಚಿ ಕುರಿತು ಹೇಳಿದರು.
ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಖಜಾನೆ ಉಪ ನಿರ್ದೇಶಕಿ ಸಾವಿತ್ರಿ, ಬಿಇಓ ಗಳು, ಇತರೆ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.

error: Content is protected !!