ಫೆ. 8ರಂದು ಮುಖ್ಯಮಂತ್ರಿ ಬೊಮ್ಮಾಯಿ ಶಿವಮೊಗ್ಗಕ್ಕೆ ; ಕಾರ್ಯಕ್ರಮಕ್ಕೆ ಸಿದ್ಧತೆ

0 29

ಶಿವಮೊಗ್ಗ: ಫೆಬ್ರವರಿ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿ ಅವರ ಭೇಟಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸುತ್ತಿರುವ 3ಸಾವಿರ ಮನೆಗಳ ಪೈಕಿ 288 ಮನೆಗಳು ಉದ್ಘಾಟನೆಗೆ ಸಿದ್ಧಗೊಂಡಿದ್ದು, ಅವುಗಳನ್ನು ಫಲಾನುಭವಿಗಳಿಗೆ ನೇರವಾಗಿ ಹಸ್ತಾಂತರಿಸುವರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು 700 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವರು. ಉದ್ಘಾಟನೆಗೆ ಪೂರ್ವದಲ್ಲಿ ವಿದ್ಯುತ್, ಕುಡಿಯುವ ನೀರು ಮೊದಲಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾರ್ಯ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.

ನಗರದ ಎನ್‌ಇಎಸ್ ಮೈದಾನದಲ್ಲಿ ಮುಖ್ಯಮಂತ್ರಿ ಅವರು ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದು, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುವರು. ಮುಖ್ಯಮಂತ್ರಿ ಅವರು ಭೇಟಿ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಾಗದಂತೆ ಶಿಷ್ಟಾಚಾರದ ಮಾರ್ಗಸೂಚಿಯನ್ನು ಎಲ್ಲಾ ಇಲಾಖೆಗಳು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.

ಮುಖ್ಯಮಂತ್ರಿ ಅವರ ಭೇಟಿ ಸಂದರ್ಭದಲ್ಲಿ ಅಂಬ್ಯುಲೆನ್ಸ್, ಅಗ್ನಿಶಾಮಕ ದಳದ ವಾಹನ ಇತ್ಯಾದಿ ತುರ್ತು ಸೇವೆಗಳು ಸನ್ನದ್ಧವಾಗಿರಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರುವAತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಸ್.ಎಸ್. ಬಿರಾದಾರ್, ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ
ಹಾಜರಿದ್ದರು.


Leave A Reply

Your email address will not be published.

error: Content is protected !!