ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು, ಸಿಎಂ ಜೊತೆ ಸಭೆ ; ಮಧು ಬಂಗಾರಪ್ಪ

0 454

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನು ಡಿರಿಸರ್ವ್ ಮಾಡುವ ಬಗ್ಗೆ ಈಗಾಗಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ಐಎ ಸಲ್ಲಿಸಲು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ಫೆ.22 ರಂದು ದಾಖಲೆಗಳೊಂದಿಗೆ ಅಫಿಡವಿಟನ್ನು ವಕೀಲರಿಗೆ ತಲುಪಿಸದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂತ್ರಸ್ತರ ಪುನರ್ವಸತಿ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

ಮಲೆನಾಡು ರೈತರ ಹೋರಾಟ ಸಮಿತಿ ಸದಸ್ಯರಾದ ಶ್ರೀಕರ್ ಮತ್ತು ಇತರರು, ಶರಾವತಿ ಸಂತ್ರಸ್ತರ ಪುನರ್ವಸತಿ ಕುರಿತು ಸರ್ಕಾರದ ಮಟ್ಟದಲ್ಲಿ ಒಂದು ಟಾಸ್ಕ್ ಫೋರ್ಸ್ ಸಮಿತಿ ರಚಿಸಿ, ಸಮಗ್ರವಾಗಿ ಪರಿಶೀಲನೆ ನಡೆಸಿ, ಪ್ರಸ್ತುತ ಇರುವ ಮಾರ್ಗಸೂಚಿಯನ್ನು ಪರಿಷ್ಕರಿಸಬೇಕೆಂದು ಮನವಿ ಮಾಡಿದರು.

ಸಚಿವರು, 27.4.1978 ರ ಪೂರ್ವದ ಮೂರು ಎಕರೆವರೆಗಿನ ಅರಣ್ಯ ಭೂಮಿ ಒತ್ತುವರಿ ಸಕ್ರಮಗೊಳಿಸಿ ಪಟ್ಟಾ ವಿತರಿಸುವ ಕುರಿತು ಜಿಲ್ಲಾ ವ್ಯಾಪ್ತಿಯಲ್ಲಿ 1419 ಕುಟುಂಬಳಿಗೆ 2060.30 ಎಕರೆ ಅರಣ್ಯ ಒತ್ತುವರಿ ಪ್ರದೇಶವನ್ನು ಸಕ್ರಮಗೊಳಿಸಲು ಜಿಲ್ಲಾಧಿಕಾರಿಗಳು ಶಿಫಾರಸು ಮಾಡಿದ್ದು, ಈ ಪ್ರದೇಶವು ವಿವಿಧ ಅರಣ್ಯಗಳಲ್ಲಿದ್ದು, ಪ್ರತಿ ಅರಣ್ಯಕ್ಕೆ ಸಂಬಂಧಿಸಿದಂತೆ 65 ಡಿ ರಿಸರ್ವೇಷನ್ ಪ್ರಸ್ತಾವನೆ ಸಲ್ಲಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಒತ್ತುವರಿ ಸಕ್ರಮಾತಿ ಆದೇಶಗಳಲ್ಲಿನ ಷರತ್ತುಗಳಂತೆ ಸಿದ್ದಪಡಿಸಬೇಕಿದೆ. ಈ ಷರತ್ತುಗಳಂತೆ ಪ್ರಸ್ತಾವನೆಗಳನ್ನು ಸಿದ್ದಪಡಿಸಲು ಕ್ಷೇತ್ರದಲ್ಲಿ ಹಲವಾರು ಅಡಚಣೆಳಿದ್ದು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ 2006 ಹಾಗೂ ನಿಯಮ 2008 ರಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 97075 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು 2444 ಅರ್ಜಿದಾರರಿಗೆ ಹಕ್ಕು ಪತ್ರ ವಿತರಿಸಿದ್ದು 2893 ಅರ್ಜಿ ವಿಲೇಗೆ ಬಾಕಿ ಇವೆ. ಉಳಿದವರು ವಿವಿಧ ಕಾರಣಗಳಿಗೆ ತಿರಸ್ಕೃತಗೊಂಡಿವೆ. ಸರ್ಕಾರದ ನಾಮನಿರ್ದೇಶಿತ ಸದಸ್ಯರು ಇಲ್ಲದೇ ಇರುವ ಉಪವಿಭಾಗೀಯ ಮಟ್ಟದ ಅರಣ್ಯ ಹಕ್ಕು ಸಮಿತಿಯಲ್ಲಿ ನಿಯಮಬಾಹಿರವಾಗಿ ವಜಾ ಆಗಿರುವ ಅರ್ಜಿಗಳ ಬಗ್ಗೆ ಸಲಹೆಗಳನ್ನು ಸ್ವೀಕರಿಸಿ ಪರಿಶೀಲಿಸಲಾಗುವುದು ಎಂದರು.

ಹೊಸನಗರ ಹಾಗೂ ಇತರೆ ತಾಲ್ಲೂಕುಗಳ ಕಂದಾಯ ಗ್ರಾಮಗಳಲ್ಲಿ ಯಾವುದೇ ಅಧಿಸೂಚನೆಯಾಗದೇ ‘ಸೂಚಿತ ಅರಣ್ಯವೆಂದು’ ಕಂದಾಯ ಇಲಾಖೆಗಳಲ್ಲಿ ದಾಖಲಿಸಿರುವುದನ್ನು ಕೈಬಿಡಬೇಕೆಂಬ ಬೇಡಿಕೆ ಕುರಿತು ಕಾನೂನು ಇಲಾಖೆ ಅಭಿಪ್ರಾಯ ಕೇಳಲಾಗಿದೆ. ಈ ಬಗ್ಗೆ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸೊಪ್ಪಿನಬೆಟ್ಟ ಹಾಗೂ ಕಾನು ಜಮೀನುಗಳ ಅನಧಿಕೃತ ಸಾಗುವಳಿ ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡುವ ಬಗ್ಗೆ ನಮೂನೆ 53 ರಲ್ಲಿ 146601 ಅರ್ಜಿಗಳು ಬಂದಿದ್ದು 18805 ಕ್ಕೆ ಮಂಜೂರಾತಿ ದೊರೆತಿದೆ, 127480 ತಿರಸ್ಕೃತಗೊಂಡಿವೆ. ನಮೂನೆ 50 ರಲ್ಲಿ 109940 ಅರ್ಜಿಗಳು ಬಂದಿದ್ದು, 21654 ಅರ್ಜಿಗಳು ಮಂಜೂರಾಗಿವೆ, 89079 ತಿರಸ್ಕೃತಗೊಂಡಿವೆ. ಇದಕ್ಕೆ ಸಂಬಂಧಿಸಿದ ಸರ್ಕಾರದ ಸುತ್ತೋಲೆ ಕುರಿತು ಪುನರ್‌ ಪರಿಶೀಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಇತರೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮೈಸೂರು ಲ್ಯಾಂಡ್ ರೆವಿನ್ಯೂ ಕೋಡ್ 1888 ರಲ್ಲಿ ಮಂಜೂರು ಮಾಡಲಾದ ಮನೆಗಳಿಗೆ ಹಂಗಾಮಿ ಮನೆಗಳೆಂದು ಇರುವ ಕಾರಣ ಅವರಿಗೆ ಬ್ಯಾಂಕ್ ಸಾಲ, ಪೋಡಿ ಇತರೆ ಸೌಲಭ್ಯಗಳು ಸಿಗುತ್ತಿಲ್ಲ. ಆದ್ದರಿಂದ ಹಂಗಾಮಿ ಮನೆದಳ ಪತ್ರವನ್ನು ಖಾಯಂ ಗೊಳಿಸುವ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಗ್ರಾ.ಪಂ ಗಳ ವ್ಯಾಪ್ತಿಯಲ್ಲಿ ಗ್ರಾಮ ಠಾಣಾಗಳಲ್ಲಿರುವ ಮನೆಗಳಿಗೆ ಹಾಗೂ ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ಮತ್ತು ವಸತಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಇ-ಸ್ವತ್ತು ದಾಖಲೆ ಒದಗಿಸುವುದು ಸಮಸ್ಯೆಯಾಗುತ್ತಿದೆ. ಸರ್ವೇಯರ್‍ ಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರಣವಾಗಿದ್ದು ಸಕಾಲದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸಿಇಓ ಪರಿಶೀಲಿಸಿ ಕ್ರಮ ವಹಿಸಬೇಕು ಹಾಗೂ ಹೆದ್ದಾರಿ, ರಾಜ್ಯ ಹೆದ್ದಾರಿ, ಮುಖ್ಯ ರಸ್ತೆಗಳಲ್ಲಿರುವ ಮನೆಗಳಿಗೆ ಇಸ್ವತ್ತು ವಿತರಣೆಗೆ ಸಮಸ್ಯೆ ಕುರಿತು ಡಿಸಿ, ಸಿಇಓ ಹಾಗೂ ಸಮಿತಿ ಸದಸ್ಯರು ಚರ್ಚಿಸಿ ಸಲಹೆ ನೀಡುವಂತೆ ತಿಳಿಸಿದರು.

ಅಧಿಸೂಚಿತ ಅರಣ್ಯ ಪ್ರದೇಶದಲ್ಲಿ ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ನಿಮಯದಡಿ ಮಂಜೂರು ಮಾಡಲಾದ ಹಾಗೂ ರೈತರ ಸಾಗುವಳಿ ಮತ್ತು ಸ್ವಾಧೀನಾನುಭವದಲ್ಲಿರುವ ಭೂಮಿಯನ್ನು ಅರಣ್ಯ ಭೂಮಿ ಎಂದು ಇಂಡೀಕರಣ ಮಾಡುವುದನ್ನು ಕೈಬಿಡಬೇಕೆಂದು ರೈತರು ಮನವಿ ಮಾಡಿದ್ದು, ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು. ಇದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ನೀಡುವಂತೆ ತಿಳಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ವಿದ್ಯುತ್, ನೀರಾವರಿ ಇನ್ನಿತರೆ ಯೋಜನೆ ಮುಳುಗಡೆ ಸಂತ್ರಸ್ತ ಭೂ ಹಕ್ಕಿಗೆ ಸಂಬಂಧಿಸಿದಂತೆ, ಸ್ವಾಧೀನಪಡಿಸಿಕೊಂಡೂ ಅನುಪಯುಕ್ತವಾದ ಭೂಮಿ ಸಾಕಷ್ಟು ಕಡೆಗಳಲ್ಲಿದ್ದು ಈ ಬಗ್ಗೆ ಪರಿಹಾರ ಕಂಡುಕೊಳ್ಳಲು ಸಮಿತಿ ಮತ್ತು ಆಡಳಿತಾಧಿಕಾರಿಗಳಿಂದ ಸಲಹೆ ಪಡೆದು ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದರು.

ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಒಟ್ಟು 31882 ಕುಟುಂಬಳು ನಿವೇಶನ ರಹಿತವಾಗಿದ್ದು ಆಶ್ರಯ ಯೋಜನೆಯಡಿ ನಿವೇಶನ ನೀಡುವ ಕುರಿತು ಅಗತ್ಯ ಭೂ ಮಂಜೂರಾತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಮನೆ ನೀಡುವುದು ನಮ್ಮ ಕರ್ತವ್ಯ ಈ ಬಗ್ಗೆ ಹಾಗೂ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಸೆಕ್ಷನ್ 94(ಸಿ) 94 (ಸಿಸಿ) ಅಡಿಯಲ್ಲಿ ಅನಧಿಕೃತ ಮನೆ ಸಕ್ರಮಗೊಳಿಸ ಯೋಜನೆಯಡಿ ಅರ್ಜಿಗಳ ವಿಲೇವಾರಿ ಸೇರಿದಂತೆ ಅರಣ್ಯ ಮತ್ತು ಕಂದಾಯ ಹಕ್ಕುಗಳ ಕುರಿತಾದ ಸಮಸ್ಯೆಗಳ ಕುರಿತು ಅತಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ಮಲೆನಾಡು ರೈತರ ಹೋರಾಟ ಸಿಮಿತಿಯ ಪದಾಧಿಕಾರಿಗಳಾದ ತೀ.ನ.ಶ್ರೀನಿವಾಸ, ಶ್ರೀಕರ್, ರಮೇಶ್ ಹೆಗಡೆ ಇತರರು ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!