ಇಂಜಿನಿಯರ್‌ ಪತ್ನಿ ಮನೆಯಲ್ಲಿಯೇ ಶವವಾಗಿ ಪತ್ತೆ ; ಕೊಲೆ ಶಂಕೆ

0 39

ಶಿವಮೊಗ್ಗ: ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಪತ್ನಿಯ ಮೃತದೇಹ ಶಿವಮೊಗ್ಗದ ವಿಜಯನಗರದ ಮನೆಯಲ್ಲಿ ಭಾನುವಾರ ಪತ್ತೆಯಾಗಿದೆ. ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಕಮಲಮ್ಮ (54) ಸಾವಿಗೀಡಾದ ಮಹಿಳೆ. ವಿಜಯನಗರ ಎರಡನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಕೆಲಸ ಮಾಡುತ್ತಿದ್ದಾರೆ. ದಂಪತಿಯ ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾರೆ. ಹೀಗಾಗಿ ಕಮಲಮ್ಮ ಮನೆಯಲ್ಲಿ ಒಬ್ಬರೇ ವಾಸವಿದ್ದರು.

ಮಲ್ಲಿಕಾರ್ಜುನ ಅವರು ಸ್ನೇಹಿತರೊಂದಿಗೆ ಗೋವಾಗೆ ಪ್ರವಾಸ ತೆರಳಿದ್ದರು. ಅಲ್ಲಿಂದ ಪತ್ನಿಗೆ ಹಲವು ಬಾರಿ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಮಲ್ಲಿಕಾರ್ಜುನ ಅಕ್ಕಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ನೆರೆ ಮನೆಯವರು ಮನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಶನಿವಾರ ಸಂಜೆ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ತುಂಗಾನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ದಾವಣಗೆರೆಯಿಂದ ವಿಧಿವಿಜ್ಞಾನ ತಂಡ ‍ಸ್ಥಳಕ್ಕೆ ಭೇಟಿ ಪರಿಶೀಲಿಸಿದೆ.

Leave A Reply

Your email address will not be published.

error: Content is protected !!