ಕಡ್ಡಾಯ ಮತದಾನ ಮಾಡಿ ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಮನವಿ

0 40


ಶಿವಮೊಗ್ಗ: ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಜಿಲ್ಲಾ ಮತದಾರರ ವೇದಿಕೆ ಮತ್ತು ಸ್ವೀಪ್ ಸಮಿತಿ ಶಿವಮೊಗ್ಗ ಜಿಲ್ಲೆ ಇವರ ಸಹಯೋಗದಲ್ಲಿ ಇಂದು ವಿನೋಬನಗರದ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಮತದಾನ ಜಾಗೃತಿ ಸಪ್ತಾಹ ಹಾಗೂ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.


ಉತ್ತಮ ಆಡಳಿತಗಾರರನ್ನು ಆರಿಸಲು ನಾಗರೀಕರಾದ ನಾವೆಲ್ಲ ಕಡ್ಡಾಯವಾಗಿ ಮತದಾನ ಮಾಡಬೇಕು. ನಗರ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಆಗುತ್ತಿದ್ದು, ಈ ಬಾರಿ ಈ ಪ್ರಮಾಣ ಹೆಚ್ಚಬೇಕು. ಈ ನಿಟ್ಟಿನಲ್ಲಿ ನಗರದ ನಾಗರೀಕರೆಲ್ಲ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದರು.


ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಮಾತನಾಡಿ, ಮತದಾನ ಜಾಗೃತಿ ಕಾರ್ಯಕ್ರಮದ ಮುಖ್ಯ ಉದ್ದೇಶ ಮತದಾನ ಪ್ರಮಾಣ ಹೆಚ್ಚಿಸುವುದಾಗಿದ್ದು, ಜಿಲ್ಲೆಯಲ್ಲಿ ಹಲವಾರು ರೀತಿಯ ಮತದಾನ ಜಾಗೃತಿ ಕಾರ್ಯಕ್ರಮಗಳು, ಸ್ವೀಪ್ ಚಟುವಟಿಕೆಗಳ ಮೂಲಕ ಮತದಾನದ ಕುರಿತು ಜಾಗೃತಿ ಹೆಚ್ಚಿಸಲಾಗುತ್ತಿದೆ. ಅರ್ಹರೆಲ್ಲರೂ ಕಡ್ಡಾಯವಾಗಿ ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕೆಂದರು.


ಕಾರ್ಯಕ್ರಮದಲ್ಲಿ ವಿಶೇಷವಾಗಿ ಡೊಳ್ಳು ಕುಣಿತದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಹಾಗೂ ಮತದಾನ ಜಾಗೃತಿ ಮೂಡಿಸುವ ಬೀದಿನ ನಾಟಕ ತಂಡಗಳು ಪ್ರದರ್ಶನ ನೀಡಿದವು. ಸ್ಟೈಲ್ ಗ್ರೂಪ್ ಆಫ್ ಡ್ಯಾನ್ಸ್ ತಂಡದವರು ಮತದಾನ ಜಾಗೃತಿ ಗೀತೆಗಳಿಗೆ ನೃತ್ಯ ಪ್ರದರ್ಶನ ಮಾಡಿದರು. ಗಾ.ರಾ.ಶ್ರೀನಿವಾಸ್ ಮತದಾನ ಜಾಗೃತಿ ಕುರಿತು ಕವನ ವಾಚನ ಮಾಡಿದರು.


ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತರಾದ ಕೆ.ಮಾಯಣ್ಣಗೌಡ ಇವರು ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಿದರು ವಿನೋಬನಗರದ ಮತದಾರರು, ಬಿಎಲ್‍ಓಗಳು, ಮಹಾನಗರಪಾಲಿಕೆ ಸ್ವೀಪ್ ಅಧಿಕಾರಿಗಳಾದ ಸುಪ್ರಿಯಾ, ಅನುಪಮ ಮತ್ತು ತಂಡ ಇತರೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!