ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮ ; ಸಿದ್ದತೆಗೆ ಡಿಸಿ ಸೂಚನೆ

0 37


ಶಿವಮೊಗ್ಗ: ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಏಕಕಾಲದಲ್ಲಿ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಇಂದು ಜಿಲ್ಲಾಡಳಿತ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, ಇಓ ಗಳು, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಆ.27 ರಂದು ಬೆಳಗಾವಿಯಿಂದ ಮುಖ್ಯಮಂತ್ರಿಗಳು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನ ಹಾಗೂ ನಗರ ಸ್ಥಳೀಯ ಸಂಸ್ಥೆ ವಾರ್ಡ್‍ಗಳಲ್ಲಿ ಈ ಕಾರ್ಯಕ್ರಮವನ್ನು ಏಕ ಕಾಲದಲ್ಲಿ ಹಮ್ಮಿಕೊಳ್ಳಲಾಗುವುದು. ಹಾಗೂ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ಲ ಗ್ರಾ.ಪಂ, ಸ್ಥಳೀಯ ಸಂಸ್ಥೆಗಳಲ್ಲಿ ಮಾಡಲಾಗುವುದು.
ಆದ್ದರಿಂದ ಗ್ರಾಮ ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳಲ್ಲಿ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಅಗತ್ಯವಾದ ಎಲ್‍ಇಡಿ ಪರದೆ ಅಥವಾ ಒಂದು ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸೇರಿಸಿ, ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಈ ಸಮಾರಂಭಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳು ಸೇರಿಂದತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.


ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ ಗಳಲ್ಲಿ, ಮಹಾನಗರಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರತಿ ವಾರ್ಡುಗಳು ಹಾಗೂ ಪುರ ಸಭೆಗಳಲ್ಲಿ ಫಲಾನುಭವಿಗಳ ಸಂಖ್ಯೆಗನುಗುಣವಾಗಿ 3 ರಿಂದ 4 ವಾರ್ಡ್‌ಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಕ್ರಮ ವಹಿಸಬೇಕು. ಹಾಗೂ ಮಳೆಗಾಲವಾದ್ದರಿಂದ ಈ ಅಂಶವನ್ನು ಗಮನದಲ್ಲಿರಿಸಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು.


ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾ.ಪಂ ಗಳಲ್ಲಿ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಈಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ನೋಡಲ್ ಅಧಿಕಾರಿಗಳು ಕಾರ್ಯಕ್ರಮದ ಸಿದ್ದತೆಗಳನ್ನು ಗಮನಿಸಿ ವರದಿ ಸಲ್ಲಿಸಬೇಕೆಂದರು.


ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಆ.27 ರ ಈ ಕಾರ್ಯಕ್ರಮದ ಕುರಿತು ಜಿ.ಪಂ ಯೋಜನಾ ನಿರ್ದೇಶಕರು ಗ್ರಾ.ಪಂ ವಾರು ಉಸ್ತುವಾರಿ ನೋಡಿಕೊಳ್ಳಬೇಕು. ಹೊಸನಗರ, ತೀರ್ಥಹಳ್ಳಿ, ಸಾಗರ ಗಳಲ್ಲಿ ಏನಾದರೂ ನೆಟ್‌ವರ್ಕ್ ಸಮಸ್ಯೆಗಳಿದ್ದರೆ ಸರಿಪಡಿಸಿಕೊಂಡು ಈಗಿನಿಂದಲೇ ಸಿದ್ದತೆ ಆರಂಭಿಸಬೇಕು ಹಾಗೂ ಎಲ್ಲ ತಾಲ್ಲೂಕುಗಳ ಸಿಡಿಪಿಓ ಗಳು ಕಾರ್ಯಕ್ರಮದ ತಯಾರಿ ಕುರಿತು ಮೇಲ್ವಿಚಾರಣೆ ನಡೆಸಿ ಈ ಬಗ್ಗೆ ವರದಿ ಸಲ್ಲಿಸಬೇಕು. ಪ್ರತಿ ಗ್ರಾ.ಪಂ ಯಲ್ಲಿ ಫಲಾನುಭವಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.


ಸಭೆಯಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷಕುಮಾರ್, ಸಿಡಿಪಿಓ ಚಂದ್ರಪ್ಪ, ತಾಲ್ಲೂಕುಗಳ ತಹಶೀಲ್ದಾರರು, ಇಓ, ಸಿಡಿಪಿಓ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಹಾಜರಿದ್ದರು.

Leave A Reply

Your email address will not be published.

error: Content is protected !!