ಚಂದ್ರಗುತ್ತಿಗೆ ನಟ ಶಿವರಾಜ್ಕುಮಾರ್ ದಂಪತಿಗಳು ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಸೊರಬ : ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಮಲೆನಾಡಿನ ಶಕ್ತಿ ಕೇಂದ್ರವಾದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಹೋಳಿ ಹುಣ್ಣಿಮೆಯ ದಿನವಾದ ಸೋಮವಾರ ನಟ ಡಾ. ಶಿವರಾಜ್ಕುಮಾರ್, ಸಚಿವ ಎಸ್ ಮಧು ಬಂಗಾರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಅವರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ, ದೇಗುಲಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು,
ಸುದ್ದಿಗಾರರೊಂದಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಮಾತನಾಡಿ, ಚುನಾವಣಾ ಪೂರ್ವವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದೇವೆ. ಜನತೆಯಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿಯುತ್ತವೆ ಎಂಬ ವಿಶ್ವಾಸವಿದೆ. ಒಮ್ಮೆ ನನಗೆ ಜಿಲ್ಲೆಯಲ್ಲಿ ಅವಕಾಶ ದೊರಕಿಸಿಕೊಟ್ಟಲ್ಲಿ ಕ್ಷೇತ್ರದ ಮನೆ ಮಗಳಾಗಿ ಮತ್ತು ಸಚಿವ ಮಧು ಬಂಗಾರಪ್ಪ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲಾ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.
ನಟ ಶಿವರಾಜ್ಕುಮಾರ್ ಮಾತನಾಡಿ, ಈಗಾಗಲೇ ಮಧು ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಪತ್ನಿ ಗೀತಾ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ. ಜಿಲ್ಲಾಧ್ಯಂತ ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಕವಾಗಿ ಜನಬೆಂಬಲ ವ್ಯಕ್ತವಾಗುತ್ತಿದೆ. ನಾನು ಸಹ ಜಿಲ್ಲಾಧ್ಯಂತ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎಚ್ ಗಣಪತಿ ಹುಲ್ತಿಕೊಪ್ಪ, ತಬಲಿ ಬಂಗಾರಪ್ಪ, ಎಂ.ಬಿ ರೇಣುಕಾ ಪ್ರಸಾದ್, ಎಂ.ಪಿ ರತ್ನಾಕರ್, ಎನ್.ಜಿ ನಾಗರಾಜ್, ಸುನಿಲ್ ಗೌಡ, ಮಾರ್ಯಪ್ಪ ಬೆನ್ನೂರು, ಷಣ್ಮುಖಪ್ಪ ಚನ್ನಪಟ್ಟಣ, ಸೇರಿದಂತೆ ತಾಲೂಕಿನ ಅನೇಕ ಮುಖಂಡರು ಉಪಸ್ಥಿತರಿದ್ದರು.