ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ ; ಶಾಸಕ ಗೋಪಾಲಕೃಷ್ಣ ಬೇಳೂರು

0 177


ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.


ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರ ಸದುಪಯೋಗವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವುದರ ಮೂಲಕ ಅವರುಗಳು ಶೈಕ್ಷಣಿಕ ಅಭಿವೃದ್ಧಿಗೆ ಪ್ರೇರೇಪಣೆ ನೀಡಬೇಕು. ಆಗ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಉನ್ನತ ಉದ್ಯೋಗಗಳನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಹಕಾರಿಯಾಗಲಿದೆ ಎಂದು ಹೇಳಿದರು.


ನಾನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಕಾಲೇಜಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿಯನ್ನು ಕೊಡಬೇಕು, ಹಾಗೆಯೇ 2024 ರ ಮಾರ್ಚ್‌ನಲ್ಲಿ ನಡೆಯುವ ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣವಾಗುವಂತೆ ಪಾಠ ಪ್ರವಚನಗಳನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ವಿಗೆ ಕಾರಣ ಭೂತರಾಗಬೇಕೆಂದು ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ವಾಲಿಬಾಲ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೌರವಿಸಿ ಅಭಿನಂದಿಸಿದರು
ಸಭೆಯಲ್ಲಿ ಕಾಲೇಜಿನ ಪ್ರಾಚಾರ್ಯ ಎ. ಮಂಜುನಾಥ್. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ, ಸದಸ್ಯರುಗಳಾದ ಮಹಮ್ಮದ್ ರಫಿ, ನಾಗಪ್ಪ ಕಟ್ಟೆ, ಲೇಖನ, ಬೋರಪ್ಪ, ಷಣ್ಮುಖ, ಕಾಲೇಜಿನ ಹಿರಿಯ ಉಪನ್ಯಾಸಕಿ ಗೋಪಿಕಾ ಇನ್ನಿತರರಿದ್ದರು.


ಉಪನ್ಯಾಸಕರಾದ ಸಭಾಸ್ಟಿನ್ ಸ್ವಾಗತಿಸಿ, ಅಂಬಿಕಾ ಸಾಗರ್ ನಿರೂಪಿಸಿ, ಜನಾರ್ಧನ್ ಬಿ.ನಾಯಕ್ ವಂದಿಸಿದರು.

Leave A Reply

Your email address will not be published.

error: Content is protected !!