ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಂಪುಟ ಸಚಿವರ ಉಪಸ್ಥಿತಿಯಲ್ಲಿ ಜ. 12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ ; ಸಚಿವ ಮಧು ಬಂಗಾರಪ್ಪ

0 286

ಶಿವಮೊಗ್ಗ : 2024ರ ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ (Yuvanidhi) ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಸೇರಿದಂತೆ ಸಚಿವ ಸಂಪುಟದ ಸದಸ್ಯರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ (Madhu Bangarappa) ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಈಗಾಗಲೇ ಅನುಷ್ಠಾನಗೊಳಿಸಲಾಗಿದ್ದು, 5ನೇ ಗ್ಯಾರಂಟಿ ಯೋಜನೆಯನ್ನು ಜನವರಿ 12ರಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದವರು ನುಡಿದರು.
ಪ್ರಗತಿ ಎಂಬುದು ಒಂದು ನಿರಂತರ ಪ್ರಕ್ರಿಯೆ. ಈ ಹಾದಿಯಲ್ಲಿ ಯಾರೂ ಅವಕಾಶ ವಂಚಿತರಾಗಬಾರದು. ಸಮಾಜದ ಪ್ರತಿಯೊಬ್ಬರಿಗೂ ಪ್ರಗತಿಯ ಫಲಗಳು ದೊರೆಯಬೇಕು ಹಾಗೂ ಅಭಿವೃದ್ಧಿಯ ಪಾಲುದಾರರಾಗಬೇಕೆಂಬ ಆಶಯ ನಮ್ಮದಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಸಫಲವಾಗಿವೆ ಎಂದರು.

ಯುವನಿಧಿ ಯೋಜನೆಯ ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಇದರ ವ್ಯವಸ್ಥಿತ ಅನುಷ್ಟಾನ, ವೇದಿಕೆ ನಿರ್ಮಾಣ ಮತ್ತು ವಾಹನ ಸಂಚಾರ ದಟ್ಟಣ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಯಾವುದೇ ಅಡಚಣೆಗಳುಂಟಾಗದಂತೆ ಕ್ರಮ ವಹಿಸಬೇಕು. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಸೂಕ್ಷ್ಮವಾಗಿ ಗಮನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿಶೇಷವಾಗಿ ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದಾಗಿ ಅಲ್ಲಲ್ಲಿ ದೂರುಗಳು ಕೇಳಿ ಬರುತ್ತಿವೆ. ಇಂತಹ ಯಾವುದೇ ದೂರುಗಳು ಬಾರದಂತೆ, ಈ ಯೋಜನೆಯಡಿ ಸೌಲಭ್ಯ ಪಡೆಯದೇ ಬಾಕಿ ಉಳಿದಿರುವ ಅರ್ಹರನ್ನು ಗುರುತಿಸಿ, ಯೋಜನೆಯ ವ್ಯಾಪ್ತಿಗೊಳಪಡಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯ ಅನೇಕ ಕಡೆಗಳಿಂದ ಹೆಚ್ಚುವರಿ ಬಸ್‍ಗಳಿಗಾಗಿ ಬೇಡಿಕೆ ಇದ್ದು, ಸುಮಾರು 250ಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳನ್ನು ಹಂತಹಂತವಾಗಿ ಒದಗಿಸುವಲ್ಲಿ ವೈಯಕ್ತಿಕವಾಗಿ ಗಮನಹರಿಸಲಾಗುವುದು ಎಂದ ಅವರು ಅಗತ್ಯವಿರುವ ಬಸ್‍ಗಳಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಬಯಸುವ ನಿರುದ್ಯೋಗಿ ಯುವಕರು ತಮ್ಮ ಪ್ರಸ್ತಾವನೆಯನ್ನು ಇಂದಿನಿಂದಲೇ ಆನ್‍ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚು ಸಂಖ್ಯೆಯ ಅಭ್ಯರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!