ಸೈಕ್ಲೋನ್ ಎಫೆಕ್ಟ್ ; ಎರಡು ದಿನ ಯೆಲ್ಲೋ ಅಲರ್ಟ್, ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಪಕ್ಕದ ತಮಿಳುನಾಡು ಕರಾವಳಿಯಲ್ಲಿ ಸೈಕ್ಲೋನ್ ಏಳುವ ಮುನ್ಸೂಚನೆ ದೊರೆತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಜೊತೆಗೆ ಭಾರಿ ಮಳೆ ಅಬ್ಬರಿಸಲಿದೆ. ಹೀಗಾಗಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರದ ಮೇಲ್ಮೈ ಸುಳಿಗಾಗಿ ಸೈಕ್ಲೋನ್ ರೂಪ ಪಡೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಏಪ್ರಿಲ್ 30ರವರೆಗೆ ಭಾರೀ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.ರಾಜ್ಯದ ಕರಾವಳಿ ಭಾಗ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಯಾದಗಿರಿ ಜಿಲ್ಲೆಗಳಲ್ಲಿ 2 ದಿನ ಸಾಧಾರಣ ಮಳೆಯಾಗಿ ನಂತರ ಹೆಚ್ಚಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಭಾರೀ ಮಳೆಯ ಕಾರಣಕ್ಕೆ ಏಪ್ರಿಲ್ 26 ಮತ್ತು 29ರಂದು ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಏಪ್ರಿಲ್ 29 ಮತ್ತು 30 ರಂದು ಭಾರೀ ಮಳೆ ಸುರಿಯುವ ಸಂಭವವಿದೆ. ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಬೀಳುವ ಎಂದು ಎಚ್ಚರಿಕೆ ನೀಡಿದ್ದಾರೆ.
ಗಾಳಿಯ ವೇಗ ಪ್ರತಿ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿರಲಿದೆ. ಹೀಗಾಗಿ ದಿನವೀಡಿ ಮೋಡ ಕವಿದ ವಾತಾವರಣದ ಜೊತೆಗೆ ತಂಪನೆಯ ಗಾಳಿ ಬೀಸಲಿದೆ. ಈ ವೇಳೆ ತಾಪಮಾನ ಇಳಿಕೆಯಾಗಲಿದೆ.