Shivamogga | ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ; ಡಾ|| ಆರ್.ಸೆಲ್ವಮಣಿ

0 147


ಶಿವಮೊಗ್ಗ : ಸಾಗರ ರಸ್ತೆಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕೆಲವು ವರ್ಷಗಳ ಹಿಂದೆ 10ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾರ್ಯ ಇನ್ನೂ ಅಪೂರ್ಣವಾಗಿದೆ. ಈ ಕಾಮಗಾರಿಯು ಮುಂದಿನ 15ದಿನಗಳೊಳಗಾಗಿ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ತಪ್ಪಿದಲ್ಲಿ ಕಾಮಗಾರಿಯ ಮೇಲುಸ್ತುವಾರಿ ವಹಿಸಿಕೊಂಡಿರುವ ಮಹಾನಗರಪಾಲಿಕೆ ಸಹಾಯಕ ಅಭಿಯಂತರ ಹಾಲೇಶಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.


ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ 189ನೇ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ 22ನೇ ಕೈಗಾರಿಕಾ ಸ್ಪಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸಂಬಂಧ ಉಸ್ತುವಾರಿ ಅಧಿಕಾರಿಗೆ ನೋಟೀಸ್ ಜಾರಿಗೊಳಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಅವರಿಗೆ ಸೂಚಿಸಿದರು.


ಸದರಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಪಾಲಿಕೆ ವತಿಯಿಂದ ಕಸದ ವಿಲೇವಾರಿ ಆಗುತ್ತಿದೆ. ಪ್ರಸ್ತುತ 24*7 ನೀರಿನ ಸಂಪರ್ಕದ ಕೊರತೆ ಇದ್ದು, ಅದನ್ನು ವiಹಾನಗರಪಾಲಿಕೆ ವತಿಯಿಂದ ಮುಂದಿನ ಕೆಲವು ದಿನಗಳೊಳಗಾಗಿ ಒದಗಿಸಲು ಕ್ರಮ ವಹಿಸಲಾಗುವುದು ಎಂದ ಅವರು, ವಸಾಹತು ಮುಂಭಾಗದ ಮುಖ್ಯ ರಸ್ತೆಯಲ್ಲಿ ಟ್ರಕ್ ಹಾಗೂ ಇತರೆ ವಾಹನಗಳ ನಿಲುಗಡೆ ಮಾಡುತ್ತಿರುವುದರಿಂದ ಆಕಸ್ಮಿಕ ಅಫಘಾತಗಳು ಸಂಭವಿಸುತ್ತಿವೆ ಎಂಬ ಬಗ್ಗೆ ಆರೋಪಗಳಿವೆ. ಈ ಸಂಬಂಧ ಕೈಗಾರಿಕೋದ್ಯಮಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಉಪಸ್ಥಿತಿಯಲ್ಲಿ ಶೀಘ್ರದಲ್ಲಿ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.
ನಗರದ ಹೊರವಲಯ ನಿದಿಗೆಯ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್‌ಪೋರ್ಟ್ ಪ್ರೈ.ಲಿ., ಕೈಗಾರಿಕಾ ಘಟಕದ ಮಾಲಿನ್ಯದಿಂದ ವಾತಾವರಣ ನಿರಂತರವಾಗಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಪಡೆದು ನಿಯಮಾನುಸಾರ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ಈ ಪ್ರದೇಶದಲ್ಲಿ ಖೊಡೇಸ್ ಕಂಪನಿಯ ಕೈಗಾರಿಕಾ ಘಟಕಗಳನ್ನು ತೆರೆಯಲು ದಶಕಗಳ ಹಿಂದೆಯೇ ಸುಮಾರು 140ಎಕರೆ ಜಮೀನನ್ನು ಮಂಜೂರು ಮಾಡಿದ್ದು, ಅವರು ಸದರಿ ಭೂಮಿಯನ್ನು ಸ್ವತಃ ತಾವೂ ಬಳಸದೇ, ಇತರರಿಗೂ ಅವಕಾಶ ನೀಡದೆ ಹಾಗೆಯೇ ಉಳಿದಿದೆ. ಆದ್ದರಿಂದ ಸದರಿ ಭೂಮಿಯ ಒಡೆತನ ಹೊಂದಿರುವ ಸಂಸ್ಥೆಯ ಮುಖ್ಯಸ್ಥರಿಗೆ ಮನವಿ ಮಾಡಿಕೊಂಡು ಭೂಮಿಯನ್ನು ವಶಕ್ಕೆ ಪಡೆದು, ಇತರ ಆಸಕ್ತರಿಗೆ ಹಂಚಿಕೆ ಮಾಡುವುದರಿಂದ ಕೈಗಾರಿಕಾ ಪ್ರದೇಶ ವಿಸ್ತರಣೆಗೊಳ್ಳಲಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಕೈಗಾರಿಕೋದ್ಯಮಿಗಳು ಸಭೆಯ ಗಮನಕ್ಕೆ ತಂದರು.


ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚುವರಿ ಉತ್ಪನ್ನ ತಯಾರಿಸಲು ಹಾಗೂ ಘಟಕಕ್ಕೆ ಮುಂದಾಗಿರುವ 50ಹೆಚ್.ಪಿ. ವಿದ್ಯುತ್‍ಗೆ ಹೆಚ್ಚುವರಿಯಾಗಿ 150ಹೆಚ್.ಪಿ. ವಿದ್ಯುತ್ ಮಂಜೂರಾತಿಗಾಗಿ ಕೋರಿಕೆ ಸಲ್ಲಿಸಿರುತ್ತಾರೆ. ಅಲ್ಲದೇ ಅಲ್ಲಿನ ಎಸ್.ಜಿ.ಕೆ. ಇಂಡಸ್ಟ್ರಿಸ್‍ನ ಹೆಸರನ್ನು ಬದಲಾಯಿಸಿಕೊಳ್ಳಲು ಅನುಮತಿ ನೀಡುವಂತೆ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಮೆ.ರಹಮಾನಿಯ ಕಾಂಕ್ರೀಟ್ ಪ್ರೊಡಕ್ಟ್ ಘಟಕಕ್ಕೆ ಹೆಚ್ಚಿನ ವಿದ್ಯುತ್ ಸರಬರಾಜು ಮಾಡುವ ಮುನ್ನ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯುವಂತೆ ಅವರು ಸೂಚಿಸಿದರು.


ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಗೆ ಪಡೆದು ಮಂಡಳಿಯ ನಿಯಮಾನುಸಾರ ಘಟಕ ಸ್ಥಾಪಿಸದಿರುವವರಿಗೆ ಮೂರು ತಿಂಗಳ ಕಾಲಾವಕಾಶ ನೀಡಿ ತಿಳುವಳಿಕೆ ನೀಡುವಂತೆ ಹಾಗೂ ಡಿಸೆಂಬರ್ 31ರೊಳಗಾಗಿ ಪ್ರತಿಕ್ರಿಯಿಸದಿದ್ದಲ್ಲಿ ಮಾಲೀಕತ್ವವನ್ನು ಪರಬಾರೆ ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಕೈಗಾರಿಕಾ ಪ್ರದೇಶಾಭಿವೃದ್ಧಿ ಸಮಿತಿಯ ನೋಡಲ್ ಅಧಿಕಾರಿ ಹೆಚ್.ಆರ್.ರಾಜಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಸೇರಿದಂತೆ ವಿವಿಧ ಕೈಗಾರಿಕಾ ಸಂಘಗಳ ಅಧ್ಯಕ್ಷರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸಸ್ಥಿತರಿದ್ದರು.

Leave A Reply

Your email address will not be published.

error: Content is protected !!