ಶಿವಮೊಗ್ಗ: ಜನಸಾಮಾನ್ಯರ ದಿನನಿತ್ಯದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಶಿಕಾರಿಪುರದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿವಾರಣೆಯಾಗಬೇಕು ಎಂದರು.
ಗ್ರಾಮಾಂತರ ಭಾಗದ ಜನರು ತಮ್ಮ ಕೆಲಸಗಳಿಗಾಗಿ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ ಅಥವಾ ಬೆಂಗಳೂರಿನವರೆಗೂ ಅಲೆದಾಡುವ ಪರಿಸ್ಥಿತಿ ಎದುರಾಗುವುದು ನೋವಿನ ಸಂಗತಿ. ಇದರಿಂದ ಜನರ ಹಣ ಮತ್ತು ಸಮಯ ಎರಡೂ ವ್ಯರ್ಥವಾಗುತ್ತದೆ. ಈ ತೊಂದರೆ ಕಡಿಮೆ ಮಾಡಲು ಪ್ರಜಾ ಸೇವೆ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಸಚಿವರು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕಾಳಜಿಯಿಂದ ಈ ಕಾರ್ಯಕ್ರಮ ಜಾರಿಗೆ ಬಂದಿದೆ. ಸಚಿವರು, ಶಾಸಕರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯವಸ್ಥೆ ಇದಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ಅರ್ಜಿ ಹಿಡಿದು ಕಚೇರಿಗಳ ಸುತ್ತಾಡುವುದನ್ನು ತಪ್ಪಿಸಿ, ಒಂದೇ ವೇದಿಕೆಯಲ್ಲಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶ ಇದೆ. ಜಿಲ್ಲಾಡಳಿತವು ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಬೇಕು ಎಂದು ಮಧು ಬಂಗಾರಪ್ಪ ಸೂಚಿಸಿದರು.
ಅಧಿಕಾರಿಗಳು ಸರ್ಕಾರದ ಗೌರವ ಹೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡಬೇಕು. ಜನರ ತೆರಿಗೆಯ ಹಣ ಸರಿಯಾಗಿ ಬಳಕೆಯಾಗಬೇಕು. ಅರ್ಜಿಗಳನ್ನು ಕೇವಲ ಸ್ವೀಕರಿಸುವುದಷ್ಟೇ ಅಲ್ಲದೆ, ಮಾನವೀಯ ನೆಲೆಯಲ್ಲಿ, ಕಾನೂನುಬದ್ಧವಾಗಿ ಮತ್ತು ಪಕ್ಷಾತೀತವಾಗಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದರು.
ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಪ್ರಜಾ ಸೇವೆ ಆಂದೋಲನ ಸಭೆ ನಡೆಸಲಾಗುವುದು. ಸಾರ್ವಜನಿಕರ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲೆಯಲ್ಲಿ ಬರದ ಛಾಯೆ ಕಾಣಿಸುತ್ತಿದೆ. ಜನರು ಮತ್ತು ಜಾನುವಾರುಗಳ ರಕ್ಷಣೆ, ನೀರು ಹಾಗೂ ವಿದ್ಯುತ್ ಕೊರತೆ ಉಂಟಾಗದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದರು.
ಏತ ನೀರಾವರಿ ಮೂಲಕ ಗ್ರಾಮೀಣ ಕೆರೆಗಳನ್ನು ತುಂಬಿಸುವ ಕೆಲಸ ನಡೆಯುತ್ತಿದೆ. ಮಳೆ ಕಡಿಮೆ ಆಗಿರುವುದರಿಂದ ಕನಿಷ್ಠ ಶೇ.50ರಷ್ಟು ಕೆರೆಗಳನ್ನು ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 4,351 ಕೆರೆಗಳಿದ್ದು, ಅದರಲ್ಲಿ 1,017 ಕೆರೆಗಳು ಒತ್ತುವರಿಯಾಗಿವೆ. ಸಂಬಂಧಿಸಿದ ಇಲಾಖೆಗಳು ಕೆರೆಗಳ ಒತ್ತುವರಿ ತೆರವುಗೊಳಿಸಿ ನೀರು ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಸೂಚಿಸಿದರು.
ಸರ್ಕಾರದ ಯೋಜನೆಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳಲು ಇಲಾಖೆಗಳ ನಡುವೆ ಉತ್ತಮ ಸಮನ್ವಯ ಅಗತ್ಯವಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ರಾಘವೇಂದ್ರ ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ನಗರದ ಮಹದೇವಪ್ಪ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಗೌಡ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿಗಳಾದ ವೀರೇಶ್, ಡಾ. ಮೈತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಫಲಾನುಭವಿಗಳಿಗೆ ಕೃಷಿ ಹೊಂಡ ನಿರ್ಮಾಣದ ಕಾರ್ಯದೇಶ, ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್ ಪುಸ್ತಕ, ಆಪತ್ ಮಿತ್ರ ಯೋಜನೆಯಡಿ ಗ್ರಾಮ ಪಂಚಾಯಿತಿಗಳಿಗೆ ಸುರಕ್ಷತಾ ಕಿಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು.
ಸಭೆಯಲ್ಲಿ ಖಾತೆ ಪೋಡಿ, ಧರಕಾಸ್ತು ಜಮೀನು, ಜಮೀನುಗಳಿಗೆ ಕಾಲುದಾರಿ, ಮನೆ, ನಿವೇಶನ, ಶಾಲಾ ಸೌಲಭ್ಯ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು.

