ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ ಹೇಳಿಕೆಯನ್ನುಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಜುಲೈ 21ರಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ, ಸಿಗಂದೂರು ಸೇತುವೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, “ಸಿಗಂದೂರು ದೇವಸ್ಥಾನವನ್ನು ಯಾರು ಹಾಳು ಮಾಡಲು ಯತ್ನಿಸಿದರು ಎಂಬುದನ್ನು ಒಂದು ತಿಂಗಳೊಳಗೆ ನಿಮಗೆ ತಿಳಿಸುತ್ತೇನೆ” ಎಂದು ಹೇಳಿದ್ದರು.
ಆದರೆ, ಈ ಹೇಳಿಕೆಯನ್ನು ಬಿಜೆಪಿ ಸಾಮಾಜಿಕ ಜಾಲತಾಣ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಎಡಿಟ್ ಮಾಡಿ, “ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳೊಳಗೆ ನಿಮಗೆ ಡಿಟೈಲ್ ಹೇಳುವೆ” ಎಂಬ 19 ಸೆಕೆಂಡ್ಗಳ ವಿಡಿಯೋ ರೂಪದಲ್ಲಿ ಪ್ರಸಾರ ಮಾಡಿದ್ದಾರೆ ಎಂಬ ಆರೋಪ ಭಕ್ತ ಮಂಡಳಿಯಿಂದ ಕೇಳಿಬಂದಿದೆ.
ಭಕ್ತ ಮಂಡಳಿಯ ಪ್ರಕಾರ, ಈ ವಿಡಿಯೋ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸುವಂತಿದ್ದು, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನವಾಗಿದೆ. ಆದ್ದರಿಂದ, ಇದರ ಹಿಂದಿರುವವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಜಿಲ್ಲಾ ರಕ್ಷಣಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

