ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ವಿ. ಅವರನ್ನು ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.
ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಹ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಲಾಗಿದೆ ಎಂಬ ಆರೋಪ ಡಾ. ವಿರೂಪಾಕ್ಷಪ್ಪ ಅವರ ಮೇಲಿತ್ತು.
ಸಂಸ್ಥೆಯಲ್ಲಿ ಇತರ ಮೂವರು ಕ್ಯಾನ್ಸರ್ ಶಸ್ತ್ರಚಿಕಿತ್ಸಕರು ಲಭ್ಯವಿದ್ದರೂ, ಡಾ. ಅಶ್ವಿನ್ ಹೆಬ್ಬಾರ್ ಒಬ್ಬರೇ ಲಭ್ಯವಿದ್ದಾರೆ ಎಂಬ ರೀತಿಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ನಿರ್ದೇಶಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು.
ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ ಸಿಸಿಎ ನಿಯಮಾವಳಿಗಳಡಿ ಸರ್ಕಾರ ಅಮಾನತು ಆದೇಶ ಹೊರಡಿಸಿದೆ. ಇಲಾಖಾ ವಿಚಾರಣೆ ಕಾಯ್ದಿರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸಿಮ್ಸ್ ನಿರ್ದೇಶಕರ ಹುದ್ದೆ ತೆರವಾಗಿರುವ ಹಿನ್ನೆಲೆಯಲ್ಲಿ, ಸಿಮ್ಸ್ ಪ್ರಾಂಶುಪಾಲರಾದ ಡಾ. ರಮೇಶ್ ಬಾಬು ಕೆ. ಅವರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ.
ಪ್ರಕರಣವು ಸಿಮ್ಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಇಲಾಖಾ ವಿಚಾರಣೆಯತ್ತ ಗಮನ ಹರಿದಿದೆ.

