ಹೊಸನಗರ : ಮಕ್ಕಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಕೃಷಿ ಚಟುವಟಿಕೆಗಳತ್ತ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕು ಕೃಷಿ ಸಮಾಜದ ವತಿಯಿಂದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ ಎಂದು ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಇದೇ ಫೆಬ್ರವರಿ 17ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಿಆರ್ಸಿ ಸಭಾಭವನದಲ್ಲಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
‘ನಾನು ಕೃಷಿಕನಾದರೆ..!?’ ಎಂಬ ವಿಷಯದ ಮೇಲೆ ನಡೆಯುವ ಈ ಭಾಷಣ ಸ್ಪರ್ಧೆಯಲ್ಲಿ ಪ್ರತಿ ಶಾಲೆಯಿಂದ ಆಯ್ಕೆಯಾದ ಒಬ್ಬ ವಿದ್ಯಾರ್ಥಿಗೆ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಪ್ರಾಥಮಿಕ ಸುತ್ತಿನ ಬಳಿಕ ಆಯ್ಕೆಯಾಗುವ ಐದು ವಿದ್ಯಾರ್ಥಿಗಳಿಗೆ ಫೆಬ್ರವರಿ 21ರ ಶನಿವಾರ ಬೆಳಿಗ್ಗೆ 10.30ಕ್ಕೆ ಕೃಷಿ ಇಲಾಖೆಯ ಸಭಾಂಗಣದಲ್ಲಿ ‘ಆಧುನಿಕ ಕೃಷಿ – ಆರೋಗ್ಯಕರ ಕೃಷಿ’ ಎಂಬ ವಿಷಯದ ಮೇಲೆ ಅಂತಿಮ ಸುತ್ತಿನ ಭಾಷಣ ಸ್ಪರ್ಧೆ ನಡೆಯಲಿದೆ.
ಲೇಖನವನ್ನು ಮುಂದುವರಿಸಿ ಓದಿ
ಅಂತಿಮ ಸುತ್ತಿನಲ್ಲಿ ಆಯ್ಕೆಯಾಗುವ ಸ್ಪರ್ಧಿಗಳಿಗೆ ನೆನಪಿನ ಕಾಣಿಕೆ ಹಾಗೂ ನಗದು ಬಹುಮಾನ ವಿತರಿಸಲಾಗುತ್ತದೆ.
- ಪ್ರಥಮ ಬಹುಮಾನ : ₹5,000
- ದ್ವಿತೀಯ ಬಹುಮಾನ : ₹3,000
- ತೃತೀಯ ಬಹುಮಾನ : ₹2,000
ಸ್ಪರ್ಧೆಯಲ್ಲಿ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಕೆಲವು ನಿಬಂಧನೆಗಳು ಅನ್ವಯವಾಗಲಿವೆ. ಸ್ಪರ್ಧೆಯ ತೀರ್ಪುಗಾರರ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.

