CHIKKAMAGALURU ; ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಗ್ರಾಮಸ್ಥರು ದೇವಾಲಯದಲ್ಲಿ ಪೂಜೆ ಸಲ್ಲಿಸದೆ ಹಿಂದಿರುಗಿದ ಘಟನೆ ಬೆಳವಾಡಿ ಸಮೀಪದ ನರಸೀಪುರ ಗ್ರಾಮದಲ್ಲಿ ನಡೆದಿದೆ.
ಈ ಘಟನೆ ಹಿನ್ನೆಲೆಯಿಂದ ಸ್ಥಳಕ್ಕೆ ತಹಶೀಲ್ದಾರ್ ಡಾ.ಸುಮಂತ್, ರಾಜಸ್ವ ನಿರೀಕ್ಷಕರು ಭೇಟಿ ನೀಡಿ ತಿರುಮಲೇಶ್ವರ ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆಂದು ತಿಳಿದು ಬಂದಿದೆ.
ನರಸೀಪುರ ಗ್ರಾಮದಲ್ಲಿ 200 ಕುರುಬ ಸಮುದಾಯದ ಕುಟುಂಬಗಳು ವಾಸವಾಗಿದ್ದರೆ, ಪರಿಶಿಷ್ಟ ಜಾತಿ ಸಮುದಾಯದ 13ರಿಂದ 15 ಕುಟುಂಬದವರು ಮಾತ್ರ ಈ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಗ್ರಾಮದ ತಿರುಮಲೇಶ್ವರ ದೇವಸ್ಥಾನಕ್ಕೆ ಹಿಂದಿನಿಂದಲೂ ಪರಿಶಿಷ್ಟ ಜಾತಿಯವರು ಪ್ರವೇಶಿಸುತ್ತಿರಲಿಲ್ಲ ಎನ್ನಲಾಗಿದೆ. ಆದರೆ, ಗ್ರಾಮದ ಇಬ್ಬರು ಪರಿಶಿಷ್ಟ ಜಾತಿ ಯುವಕರು ದೇವಸ್ಥಾನದೊಳಗೆ ಹೋಗುತ್ತೇವೆಂದು ಮಂಗಳವಾರ ತಹಶೀಲ್ದಾರ್ ಡಾ.ಸುಮಂತ್ ಅವರಿಗೆ ಮನವಿ ಸಲ್ಲಿಸಿದ್ದು, ದೇವಸ್ಥಾನದೊಳಗೆ ಪ್ರವೇಶಿಸಲು ನಮ್ಮ ಅಭ್ಯಂತರವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆನ್ನಲಾಗಿದೆ.
ಮಂಗಳವಾರ ಪೂಜೆ ನಡೆಯುತ್ತಿದ್ದ ವೇಳೆ ಯುವಕರು ದೇವಸ್ಥಾನದೊಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಕುರುಬ ಸಮುದಾಯದವರು ಪೂಜೆ ಸಲ್ಲಿಸದೆ ಹಿಂದಿರುಗಿದ್ದಾರೆಂದು ತಿಳಿದು ಬಂದಿದೆ.
ದೇವಸ್ಥಾನ 2012ರಲ್ಲಿ ಮುಜರಾಯಿ ಇಲಾಖೆಗೆ ಸೇರಿದ್ದು, ಹಿಂದಿನಿಂದಲೂ ಪೂಜೆ ಸಲ್ಲಿಸುತ್ತಿದ್ದ ಕುರುಬರು ಮಂಗಳವಾರ ಪೂಜೆ ಸ್ಥಗಿತಗೊಳಿಸಿ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.