Hosanagara

ಹೊಸನಗರ ; ಅಡಿಕೆ ಗೊನೆ ಕೊಯ್ಯುವಾಗ ದೋಟಿಗೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು, ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ಹೊಸನಗರ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಂಡ್ರಳ್ಳಿ ಎಂಬಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸ್ಥಳದಲ್ಲೇ ಕಾರ್ಮಿಕ ದುರ್ಮರಣ !

📢 Stay Updated! Join our WhatsApp Channel Now →

ಮಂಡ್ರಳ್ಳಿ ಗ್ರಾಮದ ಉಡುಪ ಎಂಬುವವರ ಅಡಿಕೆ ತೋಟದಲ್ಲಿ ಇಂದು ಕೆಲಸ ನಡೆಯುತ್ತಿತ್ತು. ಕೂಲಿ ಕಾರ್ಮಿಕ ಪುಟ್ಟಸ್ವಾಮಿ (48) ಅವರು ಅಡಿಕೆ ಗೊನೆ ಕೊಯ್ಯುತ್ತಿದ್ದಾಗ, ಅವರು ಬಳಸುತ್ತಿದ್ದ ದೋಟಿ ಆಕಸ್ಮಿಕವಾಗಿ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ತಕ್ಷಣವೇ ದೋಟಿಯ ಮೂಲಕ ವಿದ್ಯುತ್ ಪ್ರವಹಿಸಿ ಪುಟ್ಟಸ್ವಾಮಿ ಅವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಮತ್ತೊಬ್ಬನ ಸ್ಥಿತಿಯೂ ಗಂಭೀರ, ಆಸ್ಪತ್ರೆಗೆ ರವಾನೆ :

ಇದೇ ವೇಳೆ ತೋಟದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ವಿದ್ಯುತ್ ಶಾಕ್ ತಗುಲಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಗಾಯಾಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಶವಗಾರಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ :

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಹೊಸನಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದರು. ಮೃತ ಪುಟ್ಟಸ್ವಾಮಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಪರಿಹಾರಕ್ಕೆ ಸೂಚನೆ ಹಾಗೂ ಚಿಕಿತ್ಸೆಗೆ ತುರ್ತು ಕ್ರಮ :

ಅವಘಡದ ಬಗ್ಗೆ ಅತೀವ ಸಂಕಟ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ, ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಅಲ್ಲದೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>